ನಾನಾಗ ಚಿಕ್ಕವನು. ಐದೋ ಆರೋ ತರಗತಿಯಲ್ಲಿದ್ದೆ ಅನ್ನಿಸುತ್ತೆ. ಯಾರದೋ ಮನೆಯಲ್ಲಿ ಪೆನ್ಸಿಲ್ಲಿನಲ್ಲಿ ಬರೆದಿದ್ದ ಇಬ್ಬರು ವ್ಯಕ್ತಿಗಳ ಚಿತ್ರಗಳನ್ನು ಗೋಡೆಯಲ್ಲಿ ನೇತು ಹಾಕಿದ್ದರು. ಹತ್ತಿರದಲ್ಲೇ ಇದ್ದ ಒಂದು ಚಿತ್ರ ಕುವೆಂಪು ಅವರದ್ದು ಎಂದು ಅದರ ಮೇಲೆ ಬರೆದಿದ್ದರಿಂದ ಗೊತ್ತಾಯಿತು. ಸ್ವಲ್ಪ ದೂರದಲ್ಲಿದ್ದ ಚಿತ್ರ ಯಾವ ಕೋನದಿಂದ ನೋಡಿದರೂ ನಮ್ಮ ತಾತನದೇ ಚಿತ್ರದಂತೆ ಕಾಣುತ್ತಿತ್ತು. ಒಂದೇ ವ್ಯತ್ಯಾಸವೆಂದರೆ ನಮ್ಮ ತಾತ ತಲೆಗೆ ರುಮಾಲು ಸುತ್ತುತ್ತಿದ್ದರು. ಚಿತ್ರದಲ್ಲಿದ್ದ ತಾತ ಟೋಪಿ ಹಾಕಿಕೊಂಡಿದ್ದರು. ಕೊನೆಗೆ ತಡೆಯಲಾರದೇ ಎದ್ದು ಹೋಗಿ ನೋಡಿದಾಗ ಅದರ ಮೇಲೆ ದ.ರಾ.ಬೇಂದ್ರೆ ಎಂದು ಬರೆದಿತ್ತು. ನಮ್ಮ ತಾತನಿಗೂ ಅದೇ ವಯಸ್ಸು, ಸುರುಳಿಗೂದಲು, ಮೀಸೆ ಮತ್ತು ಮುಗ್ದಮುಖವಿದ್ದುದರಿಂದ ಬೇಂದ್ರೆ ಚಿತ್ರ ನನಗೆ ನನ್ನ ತಾತನ ಚಿತ್ರದಂತೆಯೇ ಕಾಣುತ್ತಿತ್ತು. ಹೀಗೆ ಬೇಂದ್ರೆ ಚಿತ್ರ ಅಂದು ನನ್ನ ಮನಸ್ಸಿನಲ್ಲಿ ದಾಖಲಾಯಿತು.
ಮೇಘದೂತ ಕಾವ್ಯ ನನಗಿಷ್ಟವಾದ ನಾಲ್ಕು ಪದ್ಯಗಳು-
ಅಗಲಿ ಇದ್ದರೂ ಆಸೆಗೊಂಡಿರಲು ಗಿರಿಯೊಳಂತು ಇಂತು
ಕೆಲವೆ ತಿಂಗಳಲಿ ಚಿನ್ನ ಕಡಗ ಮೊಳಕೈಗೆ ಸರಿದು ಬಂತು
ಕಾರಹುಣ್ಣಿಮೆಯ ಮಾರನೆಯ ದಿನವೆ ಮೋಡ ಕೋಡನಪ್ಪಿ
ಕಂಡಿತೊಡ್ಡಿನೊಡ ಡಿಕ್ಕಿಯಾಡುವಾ ಆನೆ ಬೆಡಗನೊಪ್ಪಿ
ಉತ್ತರಕ್ಕೆ ಹೊರಟವಗೆ ಉಜ್ಜಯಿನಿ ಅಡ್ಡವಾದರೇನು?
ಅಲ್ಲಿ ಮೇಲುಮಾಳಿಗೆಯ ಭೋಗ ಕಳಕೊಳ್ಳಬೇಡ ನೀನು
ಆ ಊರ ಹೆಂಗಸರ ಕಣ್ಣಬಳಿ ಮಿಂಚೆ ಮಿಣುಕು ಎನ್ನು
ಅವರ ಕಣ್ಣಕುಡಿಲಲ್ಲೆಯೊಲ್ಲೆಯಾ? ವ್ಯರ್ಥ ಇದ್ದು ಕಣ್ಣು
ತೊಳೆದ ತುರುಬು ಕಪ್ಪಾದ ನೀನು ಗಿರಿಶಿಖರದಲ್ಲಿ ತೇಲೆ
ಆಷಾಡ ಮಾವು ಸುರಿದಾವು ಗೊಂಚಲಲ್ಲಿ ಬೆಟ್ಟದೆದೆಯ ಮೇಲೆ
ಅಮರ ಮಿಥುನಗಳ ಪ್ರಣಯ ದೃಷ್ಟಿ ಅರಳರಳುವಂತೆ ಆಗೆ
ಮಲೆಯ ತುದಿಯು ಕಪ್ಪಾಗೆ ತೋರುವದು ನೆಲದ ಮೊಲೆಯ ಹಾಗೆ
ಮರದ ನಡುವೆ ಬಿಳಿ ಹಾಸಗಲ್ಲು ಬಂಗಾರ ಕೋಲು ನಡುಕೆ
ಎಳೆಬಿದಿರ ಬಣ್ಣ ಬೆಲೆ ಹರಳಿನಿಂದ ನೆಲೆಗಟ್ಟು ಅದರ ಬುಡಕೆ
ಆ ಕೋಲಿನಲ್ಲಿ ಕುಣಿಸುವಳು ನವಿಲ ನನ್ನಾಕೆ ಸಂಜೆಯಲ್ಲಿ
ಕೈ ತಟ್ಟಿ ಮಾಟ ಬಳೆ ತಕಲಾಟ ಥಕಥೈಯ ಥಾಟಿನಲ್ಲಿ







lovely!!! superb.