ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ನಾಲಗೆಯ ಮೇಲೆ ಕುರುಕ್ಷೇತ್ರ

 

-ಹರೀಶ್ ಕೇರ

ಬೆಟ್ಟದಡಿ

mahabharata
ಮಹಾಭಾರತದ ಹರಿಕತೆ ನಡೆದಿರುವಾಗ
ದಾಸರು ನಾಲಗೆ ತಪ್ಪಿ
ನಾಗರಿಕತೆ ಎಂದರೆ ಹಿಂಸೆಯ ಕತೆ
ಎಂದುಬಿಟ್ಟರು 

ಆಮೇಲೆ ಚಡಪಡಿಸಿದರು
ತಮ್ಮ ಮಾತನ್ನು ಅಲ್ಲೇ ಬಿಡುವುದೋ
ವ್ಯಾಖ್ಯಾನಿಸುವುದೋ ಅರಿಯದ ಸಂದಿಗ್ದದಲ್ಲಿ
ಮುಂದೆ ಕುಳಿತ ಮಂದಿಯ ಮುಖ ನೋಡಿದರು

ಉದ್ದ ಅಡ್ಡ ನಾಮಗಳು ಮುದ್ರೆಗಳು
ಮುಗಿದ ಕೈಗಳು ಬೋಳಿಸಿದ ತಲೆಗಳು
ಬಿಟ್ಟ ಮೈ ಹೊದ್ದ ಶಲ್ಯ ಇಣುಕುವ ಜನಿವಾರ
ಬೊಜ್ಜು ಮೈ ಹುಳಿ ತೇಗು
ತರಹೇವಾರಿ ಶಿಖೆಗಳು
ಕಾಸಿನಗಲದ ಕುಂಕುಮ ತಲೆಗೆ ಸೆರಗು
ಮುತ್ತೈದೆಯರ ಸಕಲ ಭೂಷಿತಗಳು

ಮಾತುಗಳು ಗಂಟಲಲ್ಲೇ ಉಳಿದವು
ಕುರುಕ್ಷೇತ್ರದ ನೆತ್ತರ ನದಿ ಹಾಗೇ ಮುಂದುವರಿಯಿತು

ಬಾಯಿ ಬಿಡುವ ಭೂಮಿ ಎದೆ ಸೀಳಿದ ಗದೆ
ನೀರ ತಡಿಯಲ್ಲಿ ಅನಾಥ ಹೆಣ ಕತ್ತಲಲ್ಲಿ ಕುಣಿವ ಕತ್ತಿ
ಧರ್ಮದ ವಿಜಯಕ್ಕೆ ನಾರಿಯರ ಆರ್ತನಾದದ ಬೆಂಬಲ
ಭಗ್ನ ಬ್ರಹ್ಮಾಸ್ತ್ರಕ್ಕೆ ಅರ್ಧ ಭ್ರೂಣ

ಇತ್ತೀಚೆಗೆ ದಾಸರು
ವಿಪರೀತ ತಡವರಿಸುತ್ತಾರೆ
ಅನ್ನುತ್ತಾರೆ ಎಲ್ಲರೂ

‍ಲೇಖಕರು avadhi

27 February, 2009

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading