ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಮಲ್ಲಿ ಮಲ್ಲಿ ಎಲ್ಲಿಗೆ? ಮಲ್ಲೀಪಟ್ಣದ ಗಲ್ಲಿಗೆ!

HSV9

ಎಚ್ ಎಸ್ ವೆಂಕಟೇಶ ಮೂರ್ತಿ ಅವರ ‘ಬಾರೋ ಬಾರೋ ಮಳೆರಾಯ’ ಕೃತಿಯಿಂದ

ಅವರೇ ಆಯ್ದ ಕೆಲ ಪದ್ಯಗಳು ಓದುವ ಖುಷಿಗಾಗಿ ನಿಮ್ಮ ಮುಂದೆ-

baro maleraya new copy

ಮಲ್ಲಿ ಮಲ್ಲಿ ಎಲ್ಲಿಗೆ?

ಮಲ್ಲಿ ಮಲ್ಲಿ ಎಲ್ಲಿಗೆ? ಮಲ್ಲೀಪಟ್ಣದ ಗಲ್ಲಿಗೆ!
ಯಾತಕ್ಕಮ್ಮ ಅಲ್ಲಿಗೆ? ಗೋಲೀ ಮಾಡೋ ಕಲ್ಲಿಗೆ!
ಗೋಲೀಮಾಡೋ ಕಲ್ಲನ್ ತಂದು ಯಾರಿಗೆ ಕೊಡ್ತೀ ಮಲ್ಲಿಗೆ?
ರಾತ್ರಿ ಎಲ್ಲಾ ಅಳ್ತಾ ಇರೋ ಅಡುಗೇಮನೆ ನಲ್ಲಿಗೆ!

ಪೋಲೀ ಗುಂಡ!

ಪೋಲೀ ಗುಂಡ ಬಂದ! ಕೋಳೀವಾಡದಿಂದ!
ಬಗಲಲ್ಲೊಂದು ಕೋಳಿ! ಬೆಳಗಾಯ್ತಣ್ಣ ಏಳೀ!
ಕೂಗ್ತಾ ಇತ್ತು ಕೊಕ್ಕೋ! ಉದ್ರೀಗಾದ್ರೂ ತಕ್ಕೋ!

ರಾಣೀ ಬೆಕ್ಕು-ರಾಜಾ ಬೆಕ್ಕು

ರಾಣೀ ಬೆಕ್ಕು, ರಾಜಾ ಬೆಕ್ಕು ಸಿಕ್ಕಿದ ಇಲಿಗಾಗಿ
ರೇಗಾಡುತ್ತಾ ಕೂಗಾಡುತ್ತಾ ಜಗಳಕ್ಕೇ ರೆಡಿಯಾಗಿ
ನಿಂತಿದ್ದಾಗ ಅಲ್ಲಿಗೆ ಬಂತು ನಾಯಿ-ತೆರೆದೇ ಬಾಯಿ!
ಜಗಳ ಇಲ್ಲ, ಪಗಳ ಇಲ್ಲ ಎರಡೂ ಬೆಕ್ಕು ಮಾಯ!

ಹಿರಿಯೂರಲ್ಲಿ

ಹಿರಿಯೂರಲ್ಲಿ ಕರಿಯಣ್ಣೋರು ಕುರೀ ಕಾಯ್ತಾ ಇದ್ರು!
ಕುರಿ ಕಾಯ್ತಾ ಕಾಯ್ತಾ ಒಮ್ಮೆ ಕರೀ ಬಾವೀಲಿ ಬಿದ್ರು!
ಕರೀಬಾವೀಲಿಲ್ಲ ನೀರು. ಬರೀಕತ್ತಲ ಜೋರು!
ಮೊದಲೇ ಬಿದ್ದೋರ್ ಕೇಳ್ತಾ ಇದ್ರು: “ಈಗ ಬಿದ್ದೋರ್ ಯಾರು?”

ಪಾಪನ ಚಡ್ಡಿ!

ಪುಟ್ಟ ಕಂದ ಹೈ!
ಪಾಪ! ಬರೀ ಮೈ!
ಚಡ್ಡಿ ಕೂಡ ನೈ!
ಥೈ! ಥೈ! ಥೈ!

ತಾತ ಎನ್ನುತ
ಕಣ್ಣ ತಿಕ್ಕುತ
ಅಳುತ ಇದ್ದ ತಾ
ಛೆ! ಛೆ! ಛೆ!

ತಾತ ಬಂದರು!
ಕೊಟ್ಟು ಒಂದು ರೂ
ಚಡ್ಡಿ ತಂದರು!!
ಹ! ಹ! ಹ!

ತೊಡಿಸಿ ನಿಕ್ಕರು
ತಾತ ನಕ್ಕರು
ಝಿಪ್ಪೆ ಚಕ್ಕರ್ರು!!
ಹೊ! ಹೊ! ಹೊ!

ಧೋ ಧೋ ಎಂದು!

ಧೊ! ಧೊ! ಎಂದು ಮಳೆ ಸುರಿವಂದು
ಅರಳಿದ ನಾಯಿಕೊಡೆ!
ಮುರಿಯದ ಹಾಗೆ ಬೀದಿಯ ನಾಯಿ
ನಿಂತಿದೆ ಮೇಲುಗಡೇ!

ಇಂದು ಚಿಕ್ಕ ಕೊಡೆ ಬೆಳೆದರೆ ಮುಂದೆ
ಆಗುವುದೂರಗಲ!
ಚೂರೂ ತೊಯ್ಯದೆ ನಿಲ್ಲುವೆ ಕೆಳಗೆ
ಮುಂದಿನ ಮಳೆಗಾಲ!

ಗಿಲ್! ಗಿಲ್! ಗಿಲ್!

ಗಿಲ್! ಗಿಲ್! ಗಿಲ್!
ಹೋಗ್ಬೇಡ ನಿಲ್!
ಹನಿ ಹನಿ ಮಳೆ ಜತೆ
ತಲೆ ಮೇಲೆ ಕಲ್!!

ನಮ್ಮ ಚೋಟು ನಾಯಿಗೆ

ನಮ್ಮ ಚೋಟು ನಾಯಿಗೆ
ನಾಕು ಫೀಟು ನಾಲಗೆ!
ಈಗ ಚೋಟು ಬೌ ಅಂದರೆ
ಕೇಳಿಸುವುದು ನಾಳೆಗೆ!

ಬಾವಿಯಾಮೆಚಿಪ್ಪಲಿ

ಬಾವಿಯಾಮೆಚಿಪ್ಪಲಿ
ಮಾಡಿಕೊಂಡು ಚಪ್ಪಲಿ
ಉರ್‍ಅ ತಿರುಗುತಿತ್ತು ಕತ್ತೆ
ವಾಕಿಂಗಿನ ನೆಪ್ಪಲಿ!

ಓಟೇ ರೇಟು!

ಒಂದು ಹಳೇ ಕೋಟೆ; ಕೋಟೆ ಒಳಗೊಂದು ಪೇಟೆ;
ಪೇಟೆ ಉದ್ದಕ್ಕು ಮಾರ್ತಾ ಇದ್ದಾರೆ ಒಣಾ ಮಾವಿನ ಓಟೆ!
ಓಟೇ ರೇಟು ಜಾಸ್ತಿ ಅಂದ್ರ ಶ್ರೀಮಾನ್ ಜೆಮ್ ಷೆಡ್ ತಾತ!
“ಓಟೇ ರೇಟೇ ಹಾಗೇ” ಅಂತು ಕುರುಚಲು ಗಡ್ಡದ ಹೋತ!

‍ಲೇಖಕರು avadhi

21 September, 2009

1

ನಿಮಗೆ ಇವೂ ಇಷ್ಟವಾಗಬಹುದು…

ದೆಹಲಿಯಲ್ಲಿ ರಹಮತ್

ದೆಹಲಿಯಲ್ಲಿ ರಹಮತ್

ದೆಹಲಿಯಲ್ಲಿ ರಹಮತ್ ತರೀಕೆರೆ : ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತರಲ್ಲಿ ಅತ್ಯಂತ ಕಿರಿಯರು! ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಸ್ವೀಕರಿಸಲು ದೆಹಲಿಗೆ ಬಂದ ರಹಮತ್ ತರೀಕೆರೆ ಅವರೊಂದಿಗೆ ಕೆಂಪುಕೋಟೆಗೆ ಒಂದಷ್ಟು ಸಮಯ ಕಳೆಯಬೇಕು ಎನ್ನುವ ಇರಾದೆಯಿತ್ತು. ಕೆಂಪುಕೋಟೆಯ ಪರವಾಗಿ ವೈ. […]

ಪ್ರಸಾದ್ ಸ್ವಗತ…

ಪ್ರಸಾದ್ ಸ್ವಗತ…

– ಜಿ.ರಾಜಶೇಖರ ಉಡುಪಿ ನಿಮ್ಮ ಕವಿತೆಗಳು ನಿಜಕ್ಕೂ ಒಳ್ಳೆಯ ರಚನೆಗಳಾಗಿವೆ. ಕಾವ್ಯದ ಲಯದಲ್ಲಿ ನೀವು ತುಂಬಾ ವೈವಿಧ್ಯಮಯವಾದ ಪ್ರಯೋಗಗಳನ್ನು ನಡೆಸಿದ್ದೀರಿ. ಹೊಸಗನ್ನಡ ಕಾವ್ಯದ ಕೆ.ಎಸ್.ನ.,ಅಡಿಗ , ಬೇಂದ್ರೆ ಮುಂತಾದ ಕವಿಗಳ ಸಾಲುಗಳನ್ನು ಸಹ ನೀವು ತುಂಬಾ ಅರ್ಥ ಪೂರ್ಣವಾಗಿ ದುಡಿಸಿಕೊಂಡಿದ್ದಿರಿ. ಇದು ನನಗೆ […]

ನಗ್ತಾರೆ ರಾಮಯ್ಯ

ನಗ್ತಾರೆ ರಾಮಯ್ಯ

-ಸೂತ್ರಧಾರ ರಾಮಯ್ಯ ಮುನ್ ನಗೆ ನುಡಿ ಜೀವನವನ್ನು ವಿಕಟ ದೃಷ್ಟಿಯಿಂದ ನೋಡುವ , ಆಡುವ ಮಾತಿನಲ್ಲಿ ಗಾದೆಗಳನ್ನು ಬಳಸುತ್ತಾ ಶ್ಲೇಶಾರ್ಥಗಳನ್ನು ಹೊರಡಿಸುವ ಹವ್ಯಾಸ ನನಗೆ ಬುದ್ಧಿ ಬಂದಾಗಿನಿಂದ ಇದೆ. ಈ ಗೀಳು ನನಗೆ ಯಾವಾಗ, ಯಾರಿಂದ ಅಂಟಿಕೊಂಡು ಎಂದು ಒಮ್ಮೆ ಹಿಂದಿರುಗಿ […]

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading