
ನನ್ನ ಹಡೆದು
ಸಾವ ಅಂಚಿನಲ್ಲಿ ಕೊಂಚ ನಿಂತು
ಅವತ್ತೇ ರಟ್ಟೆ ಬೀಸಿ ರೊಟ್ಟಿ ಬಡಿದಳು
ನಮ್ಮಮ್ಮ
ಮಲ್ಲಿಗೆ ಮುಖದ
ಅದನೆಂದು ಮುಡಿಯದ ಓನಾಮ
ಓದಲು ಆಕೆಗೆ ಅಕ್ಷರ ಬೇಡ
ಕಪ್ಪು ಬಿಳುಪಿನ ಮಕ್ಕಳ ಮೈ ಸಾಕು
ಮಾಡಲು ಆಕೆಗೆ ನೂರೆಂಟು ಕೆಲಸ
ಆಳು ಕಾಳು ಎಮ್ಮೆ ಮನೆ ಮಕ್ಕಳು
ಚೀರುವ ಮಗುವಿನ ಕುಂಡೆ ತೊಳೆದು
ಅದೇ ಕೈಯಲ್ಲಿ ರೊಟ್ಟಿ ಬಡಿವಳು
ಒಬ್ಬೆಯ ಮೇಲೊಬ್ಬೆ
ಮೌನದ ತುತ್ತಿಗೆ ಯಾವ ಲೆಕ್ಕ?
ಅಮ್ಮನ ಮೇಲೆ ಹಾಡು ಕಟ್ಟಿ
ಕತೆ ಹೇಳಿವೆ ಪದಗಳು ಒಂದಿಲ್ಲೊಂದು
ಅಮ್ಮ ಮಗುವಿನ ತಾಯಿಯಂತೆ
ತಂದೆಗೆ ಮಡದಿಯೆಂತೆಲ್ಲ ಇದ್ದರೆ
ಈ ಜನ
ಅಮ್ಮನನ್ನು ನೆನಪು ಮಾಡುತ್ತಿರಲಿಲ್ಲ
ಅಪ್ಪನ ಮದುವೆಯಾದ ಅವಳ
ಗೊತ್ತೆ ಆಗದಂತೆ
ತಪ್ಪು ಮಾಡಿದ ತಪ್ಪಿಗೆ
ಅಮ್ಮನೂ ಕಾರಣವಿರಬೇಕು
ನಾನಿರುತ್ತಿರಲಿಲ್ಲ
ಹಾಲು ಹೈನ ಮಾಡುವ ಅಮ್ಮ
ಅಪ್ಪನನ್ನು ಹಾಲಲ್ಲಿ ಅದ್ದಿ
ಮೈ ತೊಳೆದಳು
ಅಪ್ಪನೂ ಅಷ್ಟೆ; ಪ್ರೀತಿ ಉಣಬಡಿಸಿದ
ಅನ್ಯೋನ್ಯವಾಗಿರುವಾಗಲೆ
ಯಾಕೋ ಏನೋ ಚೀರುವ ಅಮ್ಮ
ಒಮ್ಮೊಮ್ಮೆ ರಂಪ, ಹಲವು ಸಲ ಅನುಕಂಪ
ಇಲ್ಲ ಅಂದು ಕೇಳಲಿಲ್ಲ, ಇದೆ ಎಂದೂ ಅನ್ನಲಿಲ್ಲ
ಊರ ಉಸಾಬರಿ ಮಾಡಲಿಲ್ಲ; ಅಗಸೆ ದಾಟಲಿಲ್ಲ
ಯಾರ ಮಣ್ಣಿಗೂ ಹೋಗುವುದ ಬಿಡಲಿಲ್ಲ
ಕಚ್ಚೆ ಏರಿಸಿ ಗಂಡ್ರಾಮಿಯಾಗಿ ದುಡಿದಳು
ಗಂಡಸು ಎತ್ತದಷ್ಟು ಮೇವು ಹೊರೆ ಹೊತ್ತಳು
ಕಂದ ಹಾಕಿದ ಎಮ್ಮೆಗೆ ಮುಖ ಗಂಟಿಕ್ಕಿದಳು
ಬೇಸಿಗೆಯಲ್ಲಿ ಖುಲ್ಲಾ ಹೊಡೆದು ಊರೂರು
ಅಲೆದು
ಮುಸಿಮುಸಿ ಅತ್ತಳು;ಎಲ್ಲಾ ಎಮ್ಮೆಗೆ
ಗಾಂಧಿ ಮನೆತನದ ಹೆಸರೇ ಇಟ್ಟಳು
ಅಪ್ಪ ನಿಜವಾಗಲೂ ಅಮ್ಮನನ್ನು
ತುಂಬಾ ಪ್ರೀತಿಸುವವ
ಇದು ಹೀಗೆಂದು ಒಂದು
ಮುಂಜಾವು ನನಗೆ ಗೊತ್ತಾಗಿದ್ದು
ಅಮ್ಮನೇನೂ ಕಡಿಮೆ ಇರಲಿಲ್ಲ!
ಅವರ ರಾತ್ರಿಗಳು ಮೌನ ರಾಗಗಳಾಗಿ
ಬೆಳಿಗ್ಗೆ ನನಗೆ ಅಪ್ಪನಿಗೆ
ಉಣಬಡಿಸುವಾಗಲೆ ಗೊತ್ತಾಗುತ್ತಿತ್ತು
ಅಪ್ಪನ ಮೈಸೂರ್ ಸ್ಯಾಂಡಲ್ಲು
ಅಮ್ಮನ ಬರಿ ಮೈ ಸ್ನಾನ
ನನ್ನಲ್ಲಿ ಗಾಢವಾದ ಮೌನ, ಅಕ್ಕರೆ,ಸಂಶಯ
ಈ ಅಪ್ಪ ಈ ಅಮ್ಮ
ಎಲ್ಲಿ ಹೋದರು
ಗೊತ್ತಾಗುತ್ತಿಲ್ಲ.
-ಶಿವರಾಜ ಬೆಟ್ಟದೂರು, ರಾಯಚೂರು





ಬರಹ ತುಂಬಾ ಚೆಂದ ಇದೆ ಶಿವರಾಜ್… ನಮ್ಮಂಥವರ ಅಮ್ಮಂದಿರು ಇರೋದೇ ಹೀಗೆ. ನಿಮ್ಮ ಕವನಕ್ಕೂ ನನ್ನ ಅಮ್ಮನಿಗೂ ಏನೇನು ವ್ಯತ್ಯಾಸ ಇಲ್ಲ.. ನನ್ ಬ್ಲಾಗ್ http://minchulli.wordpress.com ನಲ್ಲಿ ಅಮ್ಮನ ಬಗ್ಗೆ ನನ್ನದೊಂದು ಕವನ ಇದೆ ನೋಡಿ. (ಹೊಸದಲ್ಲ “ಅಮ್ಮ ನಿನ್ನ ಒಲುಮೆಗೆ” ಎಂಬ ಕವನ ಸಂಕಲನದಲ್ಲಿ ಪ್ರಕಟವಾಗಿದೆ.)
arthapurna kavite