ನನ್ನ ನಿನ್ನ ಸಂಬಂಧ ಕಡಿಯಿತು ಎಂದಳಾಕೆ
ಆ ಕ್ಷಣಕ್ಕಾಗಿಯೇ ಹಸಿದವನಂತೆ ’ತಥಾಸ್ತು’ ಎಂದವನು
ಬೆನ್ನು ತಿರುಗಿಸಿ ಹೋಗಿಯೇಬಿಟ್ಟ
ಅವಳು ಶಿಲೆಯಾಗಿ ನಿಂತಳು
ಎಂಥವನಿಗೊಲಿದೆನಯ್ಯಾ…ಎನ್ನಬೇಕಾದವಳು
ಇಂಥವನಿಗೊಲಿದೆಯಲ್ಲಾ…!
ಅವನತಮುಖಿ,
ಹೆಬ್ಬೆರಳ ತುದಿಯಲ್ಲಿ ಕೊಂಚ ಕೆಂಪು
ಎಲ್ಲವನ್ನೂ ಹೇಳಿಬಿಟ್ಟಾಗಿದೆ, ನೀರವ ನಿರಾಳತೆ.
ಕೋಟೆ ಕಟ್ಟುವುದಿದೆ,
ತನ್ನ ಶಿಲುಬೆಯ ತಾನೇ ಹೊತ್ತು.
ಹಂಬಲಗಳಿಗೋ ಆಯುಸ್ಸಿದೆ; ದಿನಗಳು ಮುಗಿದವು.
ಜಂಗಮಕ್ಕಳಿವುಂಟು; ಸ್ಥಾವರಕ್ಕಳಿವಿಲ್ಲ.
ಒಳಗೊಳಗೇ ಇಳಿದಳು, ಮೇಲೇರಿದಳು
ಚಂದಮಾಮನ ಮುಟ್ಟಲು ಐದೇ ಮೆಟ್ಟಲು.
ಕೋಟೆ ಕಟ್ಟಬೇಕು, ಅಲ್ಲಲ್ಲಿ ಕಳ್ಳಗಿಂಡಿಗಳನ್ನಿಟ್ಟು ಕಾಯಬೇಕು;
ಖಂಡಾಂತರ ಕ್ಷಿಪಣಿಗಳ ಯುಗ, ಎದೆಯೊಳಗೂ ಇಳಿದು ಬಿಟ್ಟಾವು!
ಸ್ವಚ್ಛಂದ ಆಕಾಶ, ಮಾಯಾಕಂಬಳಿಯಲ್ಲಿ ಕುಳಿತ ರಾಜಕುಮಾರಿ.
ಬಿಂಬಗಳೆಲ್ಲಾ ಜೀವತಳೆದು ನಕ್ಷತ್ರ ಮಾಲೆಯನು ಹಿಡಿದು ನಿಂತವು
ಬದುಕು ಕಾಮನಬಿಲ್ಲು.
ದಶದಿಕ್ಕಿನ ಹಾದಿ, ಒಬ್ಬಂಟಿ ಪಯಣ
ನನ್ನ ಶಿಲುಬೆಯ ನಾನೇ ಹೊರಬೇಕು.
ಎಲ್ಲವನ್ನೂ ಮುರಿಯಬೇಕು, ಮುರಿದು ಕಟ್ಟಬೇಕು
ಮಾತಿನಲ್ಲಿ ಜಾರಿದ್ದು ಮೌನದಲ್ಲಿ ಆಪ್ಪಿದೆ
ಹೊತ್ತ ಶಿಲುಬೆಗೆ ಏಳೇ ಮಲ್ಲಿಗೆಯ ತೂಕ!







0 Comments