‘ಅವಧಿ’ಯಲ್ಲಿ ಈಗಾಗಲೇ ಬೇಂದ್ರೆ ಕಾವ್ಯದ ಬಗ್ಗೆ ಭಿನ್ನ ನೋಟ ನೀಡುವ ಸುನಾಥರ ಬಗ್ಗೆ ಬರೆದಿದ್ದೇವೆ. ಈ ಬಾರಿ ಸುನಾಥರು ಶಿಶುನಾಳ ಶರೀಫ್ ರ ‘ಅಳಬೇಡ ತಂಗಿ ಅಳಬೇಡ ಕವಿತೆ’ ಬಗ್ಗೆ ಬರೆದ ಒಂದು ವಿಶಿಷ್ಟ ಲೇಖನ ಇಲ್ಲಿದೆ. ‘ಸಲ್ಲಾಪ’ ಬ್ಲಾಗ್ ನಿಂದ ಈ ಲೇಖನವನ್ನು ಆಯ್ದುಕೊಳ್ಳಲಾಗಿದೆ
ಅಳಬೇಡ ತಂಗಿ ಅಳಬೇಡ
-ಸುನಾಥ್

ಶಿಶುನಾಳ ಶರೀಫರು ೪೦೦ಕ್ಕೂ ಹೆಚ್ಚು ಗೀತೆಗಳನ್ನು ರಚಿಸಿದ್ದಾರೆ. ಅವುಗಳಲ್ಲಿ ಅನೇಕ ಗೀತೆಗಳು ಸಂದರ್ಭಾನುಸಾರವಾಗಿ ಹೊರಹೊಮ್ಮಿದ ಹಾಡುಗಳು. ಇಂತಹ ಹಾಡುಗಳಲ್ಲಿ “ಬಿದ್ದೀಯಬೆ ಮುದುಕಿ”, “ಗಿರಣಿ ವಿಸ್ತಾರ ನೋಡಮ್ಮ” , “ಅಳಬೇಡ ತಂಗಿ ಅಳಬೇಡ” ಮೊದಲಾದವು ಪ್ರಸಿದ್ಧವಾದ ಹಾಡುಗಳಾಗಿವೆ.
ಶರೀಫರು ಒಮ್ಮೆ ತಮ್ಮ ಊರಿನಲ್ಲಿ ನಡೆದು ಹೋಗುತ್ತಿದ್ದಾಗ, ಅದೇ ಮದುವೆಯಾದ ಹುಡುಗಿಯನ್ನು ಗಂಡನ ಮನೆಗೆ ಕಳಸಿ ಕೊಡುತ್ತಿರುವ ನೋಟವನ್ನು ನೋಡಿದರು. ಶರೀಫರ ಕಾಲದಲ್ಲಿ ಬಾಲ್ಯವಿವಾಹಗಳೇ ನಡೆಯುತ್ತಿದ್ದವು. ಹೀಗಾಗಿ, ಗಂಡನ ಮನೆಗೆ ಹೋಗುತ್ತಿರುವ ಹುಡುಗಿ ಅಳುವದು ಸಾಮಾನ್ಯ ದೃಶ್ಯವಾಗಿತ್ತು.
ಆಗ ಶರೀಫರ ಬಾಯಿಂದ ಹೊರಹೊಮ್ಮಿದ ಹಾಡು: ಅಳಬೇಡ ತಂಗಿ ಅಳಬೇಡ.
ಆ ಹಾಡು ಹೀಗಿದೆ:
ಅಳಬೇಡ ತಂಗಿ ಅಳಬೇಡ ನಿನ್ನ
ಕಳುಹಬಂದವರಿಲ್ಲಿ ಉಳುಹಿಕೊಂಬುವರಿಲ್ಲ ||ಪಲ್ಲ||
ಖಡೀಕೀಲೆ ಉಡಿಯಕ್ಕಿ ಹಾಕಿದರವ್ವಾ ಒಳ್ಳೆ
ದುಡಕೀಲೆ ಮುಂದಕ ನೂಕಿದರವ್ವಾ
ಮಿಡಕ್ಯಾಡಿ ಮದಿವ್ಯಾದಿ ಮೋಜು ಕಾಣವ್ವ ಮುಂದ
ಹುಡುಕ್ಯಾಡಿ ಮಾಯದ ಮರವೇರಿದೆವ್ವಾ ||೧||
ಮಿಂಡೇರ ಬಳಗವು ಬೆನ್ನ್ಹತ್ತಿ ಬಂದು ನಿನ್ನ
ರಂಡೇರೈವರು ಕೂಡಿ ನಗುತಲಿ ನಿಂದು
ಕಂಡವರ ಕಾಲ್ಬಿದ್ದು ಕೈಮುಗಿದು ನಿಂತರ
ಗಂಡನ ಮನಿ ನಿನಗ ಬಿಡದವ್ವ ತಂಗಿ ||೨||
ರಂಗೀಲಿ ಉಟ್ಟೀದಿ ರೇಶ್ಮಿದಡಿಶೀರಿ ಮತ್ತs
ಹಂಗನೂಲಿನ ಪರವಿ ಮರತೆವ್ವ ನಾರಿ
ಮಂಗಳ ಮೂರುತಿ ಶಿಶುನಾಳಧೀಶನ
ಅಂಗಳಕ ನೀ ಹೊರತಾದೆವ್ವ ಗೌರಿ ||೩||
…………………………….
ಹಾಡು ಪ್ರಾರಂಭವಾಗುವದು ಸಮಾಧಾನಪಡಿಸುವ ಮಾತುಗಳಿಂದ:
“ತಂಗೆವ್ವಾ, ನೀ ಎಷ್ಟs ಅತ್ತರೂ, ಅದರಿಂದ ಏನೂ ಪ್ರಯೋಜನ ಇಲ್ಲ.
ಇಲ್ಲಿ ಕೂಡಿದವರು ನಿನ್ನನ್ನು ಕಳಸುವವರೇ ಹೊರತು, ಉಳಿಸಿಕೊಳ್ಳೋರಲ್ಲಾ”.
ಈ ಮಾತುಗಳಲ್ಲಿಯ ವ್ಯಂಗ್ಯವನ್ನು ಗಮನಿಸಬೇಕು. ತೊಂದರೆ ಕೊಟ್ಟವನನ್ನು ಅಥವಾ ಅಪಕಾರ ಮಾಡಿದವನನ್ನು ಬೈಯಲು ಉಪಯೋಗಿಸುವ ಪದಪುಂಜವಿದು : “ ಏನಪಾ, ನಮ್ಮನ್ನೇನ ಕಳಸಬೇಕಂತ ಮಾಡಿಯೇನ?”
ಆದರೆ, ಇಲ್ಲಿ ಕಳಿಸುತ್ತಿರುವದು ಗಂಡನ ಮನೆಗೆ, ಅಂದರೆ ಸಂಸಾರವೆಂಬ ಮಾಯಾಲೋಕಕ್ಕೆ. ಇಂತಹ ಮಾಯಾಪ್ರಪಂಚಕ್ಕೆ ಈ ಹುಡುಗಿಯನ್ನು ನೂಕುತ್ತಿರುವವರ ಸಡಗರ ನೋಡಿರಿ:
“ಖಡೀಕೀಲೆ ಉಡಿಯಕ್ಕಿ ಹಾಕಿದರವ್ವಾ ಒಳ್ಳೆ
ದುಡಕೀಲೆ ಮುಂದಕ ನೂಕಿದರವ್ವಾ”.
ಗಂಡನ ಮನೆಗೆ ಕಳಿಸುವಾಗ ಮಗಳ ಉಡಿಯಲ್ಲಿ ಅಕ್ಕಿ ತುಂಬಿ ಕಳಿಸುವ ಸಂಪ್ರದಾಯವಿದೆಯಲ್ಲವೆ?
ಹಾಗಾಗಿ, ಈ ಹುಡುಗಿಯ ಉಡಿಯಲ್ಲಿ ಖಡಕ್ಕಾಗಿ (=full) ಅಕ್ಕಿ ತುಂಬಿ, ಬಳಿಕ ದುಡುಕುತ್ತ(=ಜೋರಿನಿಂದ) ಅವಳನ್ನು ಮುಂದೆ ನೂಕಿದರಂತೆ!
ಇದೆಲ್ಲ ಹುಡುಗಿಗೂ ಬೇಕಾದದ್ದೆ! ಅವಳು ಮಿಡುಕಿ, ಮಿಡುಕಿ ಅಂದರೆ ಹಂಬಲಿಸಿ ಮದುವೆಯಾದವಳು.
ಈ ಮಾಯೆಯ ಸಂಸಾರವನ್ನು ತಾನೇ ಹುಡುಕಿ ಹೊಕ್ಕವಳು.
ಒಮ್ಮೆ ಹೊಕ್ಕ ಮೇಲೆ ಮುಗಿಯಿತು.
ಇನ್ನು ಅವಳಿಗೆ ಮರಳುವ ಮಾರ್ಗವಿಲ್ಲ. This is path of no return.
ಈಗಾಗಲೇ ಅವಳಿಗೆ ಮಿಂಡರು ಗಂಟು ಬಿದ್ದಿದ್ದಾರೆ.
ಮಿಂಡರು ಅಂದರೆ ಮನಸ್ಸನ್ನು ಹಾದಿಗೆಡಿಸುವ ಪ್ರಲೋಭನೆಗಳು.
ತನ್ನಲ್ಲಿ ಸಂಪತ್ತು ಕೂಡಬೇಕು, ತನ್ನ ಅಂತಸ್ತು ಇತರರಿಗಿಂತ ಹೆಚ್ಚಾಗಬೇಕು, ತಾನು ಸರೀಕರೆದುರಿಗೆ ಮೆರೆಯಬೇಕು, ಇಂತಹ ಸಾಮಾನ್ಯ ಅಪೇಕ್ಷೆಗಳು ಮನಸ್ಸನ್ನು ಸನ್ಮಾರ್ಗದಿಂದ ದೂರ ಸರಿಸುವದರಿಂದ ಇವೆಲ್ಲ ಮಿಂಡರಿದ್ದ ಹಾಗೆ.
ದೇವರ ಆಲೋಚನೆ ಅಂದರೆ ಪಾತಿವ್ರತ್ಯ ; ಇತರ ಆಲೋಚನೆಗಳು ಹಾದರ.
ಇಷ್ಟೇ ಅಲ್ಲದೆ, ಇವಕ್ಕೆಲ್ಲ ಪ್ರೋತ್ಸಾಹ ಕೊಡುವ ‘ಐವರು ರಂಡೆಯರು’ ಅಂದರೆ ನಮ್ಮ ಪಂಚ ಇಂದ್ರಿಯಗಳು : ಕಣ್ಣು, ಕಿವಿ, ಮೂಗು,ನಾಲಗೆ ಹಾಗು ಚರ್ಮ.
ಈ ಐದು ಇಂದ್ರಿಯಗಳೂ ಸಹ ಸುಖಾಪೇಕ್ಷೆ ಮಾಡುತ್ತವೆ, ಅಲ್ಲವೆ?
“ಇಷ್ಟೆಲ್ಲ ಬಂಧನಗಳು ಇದ್ದಾಗ, ಇಲ್ಲಿ ಬಂದಿರುವ ಬಂಧುಗಳ ಕಾಲಿಗೆ ಬಿದ್ದರೆ, ನಿನಗೆ ಸದ್ಗತಿ ಹೇಗೆ ಸಿಕ್ಕೀತು, ತಂಗೆವ್ವಾ? ಇನ್ನು ನಿನಗೆ ಮಾಯಾಸಂಸಾರ ತಪ್ಪದು. ಮೋಜು ಬಯಸಿ ಮದಿವ್ಯಾದಿ, ಈಗ ಮೋಜನ್ನು ಅನುಭವಿಸು”, ಎಂದು ಶರೀಫರು ಹೇಳುತ್ತಾರೆ.
ಶರೀಫರು ಆ ಹುಡುಗಿಗೆ ಈ ಮಾಯಾಸಂಸಾರದಲ್ಲಿದ್ದ ಉತ್ಸಾಹವನ್ನು , ಆಸಕ್ತಿಯನ್ನು ಗಮನಿಸಿ ಈ ರೀತಿ ಹೇಳುತ್ತಾರೆ:
“ರಂಗೀಲಿ ಉಟ್ಟೀದಿ ರೇಶ್ಮಿದಡಿಶೀರಿ ”
ದಡಿ ಅಂದರೆ ಅಂಚು. ರಂಗೀಲಿ(=ರಂಗಿನಲ್ಲಿ) ಅಂದರೆ ಉತ್ಸಾಹದಿಂದ ರೇಶಿಮೆ ಸೀರೆ ಉಟ್ಟಿದ್ದಾಳೆ.
ಆದರೆ, ಈ ಹುಡುಗಿ ಹಂಗನೂಲಿನ ಪರವಿಯನ್ನು ಮರೆತು ಬಿಟ್ಟಿದ್ದಾಳೆ.
ಹಂಗನೂಲು ಅಂದರೆ, ಕೈಯಿಂದ ತಯಾರಿಸಿದ ಹತ್ತಿಯ ನೂಲು. ಅದರ ಪರವಿಯನ್ನು ಈ ಹುಡುಗಿ ಮರೆತಿದ್ದಾಳೆ. ಪರವಿ ಅಂದರೆ ಪರವಾಹ್ ಅನ್ನುವ ಉರ್ದು ಪದ ಅಂದರೆ ಕಾಳಜಿ, ಚಿಂತೆ, care, bother.
ಹೇಗೆ ಕೈಮಗ್ಗದ ಹತ್ತಿಯ ಬಟ್ಟೆ ನಿಸರ್ಗಸಹಜವಾಗಿದೆಯೊ ಹಾಗೆಯೇ ದೇವರ ನೆನಪು ನಮ್ಮ ಮನಸ್ಸಿಗೆ ಹತ್ತಿರವಾದದ್ದು. ಕೃತಕ ಹಾಗು ಆಡಂಬರದ ರೇಶಿಮೆ ಸೀರೆ ಎಂದರೆ ಸಂಸಾರದ ವೈಭವ. ಈ ವೈಭವಕ್ಕೆ ನೀನು ಮನಸೋತರೆ, ನೀನು ಮಂಗಳಮೂರುತಿ ದೇವರ ಸಾನ್ನಿಧ್ಯಕ್ಕೆ ಹೊರತಾಗುತ್ತೀ ಎಂದು ಶರೀಫರು ಎಚ್ಚರಿಸುತ್ತಾರೆ.
ಶರೀಫರು ‘ಮಂಗಳಮೂರುತಿ’ ಎನ್ನುವ ಪದವನ್ನು ಉದ್ದೇಶಪೂರ್ವಕವಾಗಿ ಬಳಸಿದ್ದಾರೆ. ಏಕೆಂದರೆ, ultimately ನಮಗೆ ಮಂಗಳವಾಗುವದು ಪಾರಮಾರ್ಥಿಕ ಚಿಂತನೆಯಿಂದಲೇ ಹೊರತು, ಸಾಂಸಾರಿಕ ಆಡಂಬರದಿಂದಲ್ಲ.
ಲೌಕಿಕ ಪ್ರತಿಮೆಗಳಿಗೆ ಆಧ್ಯಾತ್ಮಿಕ ಅರ್ಥವನ್ನು ನೀಡುವದು ಶರೀಫರ ವೈಶಿಷ್ಟ್ಯವಾಗಿದೆ. ಮಿಂಡೇರ ಬಳಗ, ರೇಶಿಮೆ ಸೀರಿ ಮೊದಲಾದ ಪ್ರತಿಮೆಗಳು ಅಚ್ಚ ದೇಸಿ ಪ್ರತಿಮೆಗಳು. ಇದರ ಜೊತೆಗೇ ಮಾಯದ ಮರದಂತಹ ಅಚ್ಚರಿಯ ಪ್ರತಿಮೆಗಳನ್ನೂ ಅವರು ಸಂಯೋಜಿಸುತ್ತಾರೆ. ಈ ರೀತಿಯಲ್ಲಿ ಶರೀಫರು ಲೌಕಿಕವಾಗಿ ಪ್ರಾರಂಭಿಸಿದ ಹಾಡನ್ನು ಆಧ್ಯಾತ್ಮಿಕ ಚಿಂತನೆಗೆ ಅತ್ಯಂತ ಸಹಜವಾಗಿ ತಿರುಗಿಸುತ್ತಾರೆ.
ಕಳುಹಬಂದವರಿಲ್ಲಿ ಉಳುಹಿಕೊಂಬುವರಿಲ್ಲ…
ನಿಮಗೆ ಇವೂ ಇಷ್ಟವಾಗಬಹುದು…





haaDina sandarbha artha sogasaagi tiLisiddakke dhanyavaada
ಮತ್ತೊಮ್ಮೆ ಓದಿಸಿದ್ದಕ್ಕೆ ಅವಧಿಗೆ ಧನ್ಯವಾದ
ಸೋರುತಿಹುದು ಮನೆಯ ಮಾಳಿಗೆ..
ಕೋಡಗನ ಕೋಳಿ ನುಂಗಿತ್ತ..
ಈ ಗೀತೆಗಳೂ ತುಂಬಾ ಪ್ರಸಿದ್ದ ಹಾಗೂ ಕೇಳಲು ಇಂಪಾಗಿವೆ..