ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಕೆ ವಿ ತಿರುಮಲೇಶ್ ಇನ್ನು ನೆನಪು…

ಪುರುಷೋತ್ತಮ ಬಿಳಿಮಲೆ

ಭಾಷೆಯ ಕುರಿತಾಗಿ ಅತ್ಯಂತ ಸೂಕ್ಷ್ಮವಾಗಿ ಮತ್ತು ನವಿರಾಗಿ ಯೋಚಿಸಿ ಬರೆಯುತ್ತಿದ್ದ ಕೆಲವೇ ಕೆಲವರಲ್ಲಿ ಕೆ.ವಿ.ತಿರುಮಲೇಶ್ ಕೂಡಾ ಒಬ್ಬರು. ಅವರು ಕವಿ, ಕತೆಗಾರ, ಅನುವಾದಕ, ಭಾಷಾ ವಿಜ್ಞಾನಿ, ಮತ್ತು ವಿಮರ್ಶಕ. ಅವರು ಕಾಸರಗೋಡಿನಲ್ಲಿದ್ದಾಗ ನಮಗೆಲ್ಲ ಬಹಳ ಹತ್ತಿರದವರಾಗಿದ್ದರು.

ತಿರುಮಲೇಶ್‌ ಹುಟ್ಟಿದ ಸ್ಥಳ ಕಾರಡ್ಕ (ಸಪ್ಟಂಬರ ೧೨, ೧೯೪೦). ಇದೇ ಊರಿನಲ್ಲಿ ಹುಟ್ಟಿದ ಇನ್ನೊಬ್ಬ ಕವಿ ವೇಣುಗೋಪಾಲ ಕಾಸರಗೋಡು ಬಹಳ ಬೇಗ ತೀರಿಕೊಂಡರು. ಕಾರಡ್ಕದ ಕಾರಣಿಕ ಪುರುಷರು ಎಂದು ನಾನು ಅವರಿಗೆ ಹೇಳುತ್ತಿದ್ದೆ. ನವ್ಯಸಾಹಿತ್ಯ ಕಾಲದಲ್ಲಿ ಕಾಸರಗೋಡು ಬಹಳ ಕಾರಣಗಳಿಂದ ಸುದ್ದಿಯಲ್ಲಿತ್ತು. ತಿರುಮಲೇಶ್‌, ವೇಣುಗೋಪಾಲ ಕಾಸರಗೋಡು, ಎಂ. ಗಂಗಾಧರ ಭಟ್, ಯು ಮಹೇಶ್ವರಿ, ಲಲಿತಾ ಎಸ್‌ ಎನ್‌ ಭಟ್‌, ಮೊದಲಾದವರು ನವ್ಯ ಕಾಲಘಟ್ಟದ ದೊಡ್ಡ ಹೆಸರುಗಳು. ಇವರೆಲ್ಲ ಒಟ್ಟು ಸೇರಿ ಒಮ್ಮೆ ʼಕಯ್ಯಾರರು ಇನ್ನು ಬರೆಯಬೇಕಾಗಿಲ್ಲʼ ಎಂದು ಘೋಷಿಸಿ ದೊಡ್ಡ ಗುಲ್ಲೆಬ್ಬಿಸಿದ್ದರು.

ಮುಂದೆ ತಿರುಮಲೇಶ್‌ ಹೈದರಾಬಾದಿನ ಸೆಂಟ್ರಲ್ ಇನ್ಸ್ಟಿಟ್ಯೂಟ್ ಆಫ್ ಇಂಗ್ಲೀಷ್ ಅಂಡ್ ಫಾರಿನ್ ಲಾಂಗ್ವೇಜಸ್ ಸಂಸ್ಥೆಯಲ್ಲಿ ಪ್ರಾಧ್ಯಾಪಕರಾಗಿ ಸೇರಿ ಅಲ್ಲಿಯೇ ನಿವೃತ್ತರಾದರು. ಹೊರನಾಡ ಕನ್ನಡಿಗರಾದ ನಾವು ಆ ಕಾರಣಕ್ಕೇನೇ ಹಲವು ವಿಷಯಗಳ ಬಗ್ಗೆ ಹರಟುತ್ತಿದ್ದೆವು. ಕಳೆದ ಸುಮಾರು ೫೦ ವರ್ಷಗಳಿಂದ ತಿರುಮಲೇಶ್‌ ಬರೆಯುತ್ತಲೇ ಇದ್ದರು. ‘ಮುಖವಾಡಗಳು’ ಹಾಗೂ ‘ವಠಾರ’ ಕವನ ಸಂಕಲನಗಳ ಮೂಲಕ ಅವರು ನವ್ಯ ಕಾಲಘಟ್ಟದಲ್ಲಿ ಜನಪ್ರಿಯರಾದರು.

ಅಕ್ಷಯ ಕಾವ್ಯ, ಮಹಾಪ್ರಸ್ಥಾನ, ಅವಧ, ಪಾಪಿಯೂ, ಆರೋಪ, ಮುಸುಗು, ಕಳ್ಳಿಗಿಡದ ಹೂವು, ಸಮ್ಮುಖ, ಕಾವ್ಯಕಾರಣ ಇವರ ಇತರ ಮುಖ್ಯ ಕೃತಿಗಳು. ಕಲಿಗುಲ ಮತ್ತು ಟೈಬೀರಿಯಸ್‌ ಅವರಿಗೆ ಹೆಸರು ತಂದುಕೊಟ್ಟ ನಾಟಕಗಳು. ಡಾನ್ ಕ್ವಿಕ್ಸಾಟನ ಸಾಹಸಗಳು ಮತ್ತು ಗಂಟೆ ಗೋಪುರ ಅವರ ಒಳ್ಳೆಯ ಅನುವಾದಗಳು. ಬೇಂದ್ರೆಯವರ ಕಾವ್ಯಶೈಲಿ, ನಮ್ಮ ಕನ್ನಡ, ಮತ್ತು ಅಸ್ತಿತ್ವವಾದ ಇವರ ಮುಖ್ಯ ವಿಮರ್ಶಾ ಕೃತಿಗಳು. ದೊಡ್ಡ ಲೇಖಕನೊಬ್ಬ ತೀರಿಕೊಂಡಾಗ ಸಹಜವಾಗಿ ಒಂದು ಬಗೆಯ ನಿರ್ವಾತ ಉಂಟಾಗುತ್ತದೆ. ಅದನ್ನು ಯಾರಾದರೂ ತುಂಬಿಸುವವರೆಗೆ ನಾವೆಲ್ಲ ಕಾಯಬೇಕಾಗುತ್ತದೆ.

‍ಲೇಖಕರು Admin

30 January, 2023

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading