ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಖ್ಯಾತ ಸಾಹಿತಿ ನಾಡೋಜ ಕಮಲ ಹಂಪನಾ ನಿಧನ

-ಶಿವಾನಂದ ತಗಡೂರು

ನಾಡಿನ ಅಗ್ರಗಣ್ಯ ಮಹಿಳಾ ಸಾಹಿತಿಯಾಗಿದ್ದ ನಾಡೋಜ ಕಮಲ ಹಂಪನಾ (89) ಅವರು ಇಂದು ರಾಜಾಜಿನಗರದ ಮನೆಯಲ್ಲಿ ಮಲಗಿದ್ದಲ್ಲಿಯೇ ಚಿರನಿದ್ರೆಗೆ ಜಾರಿದ್ದಾರೆ.

ಪತಿ ಖ್ಯಾತ ಸಾಹಿತಿ ಹಂಪ‌ ನಾಗರಾಜಯ್ಯ, ಖ್ಯಾತ ಆರ್ಕಿಟೆಕ್ಟ್ ಹರ್ಷವರ್ಧನ, ಸಾಹಿತಿ ಪುತ್ರಿಯರಾದ ಎಚ್ ಎನ್ ರಾಜ್ಯಶ್ರೀ, ದೂರದರ್ಶನ ನಿರ್ದೇಶಕರಾದ ಎಚ್.ಎನ್. ಆರತಿ, ಬಂದು ಮಿತ್ರರು, ಸೇರಿದಂತೆ ಅಪಾರ ಸಾಹಿತ್ಯಾಭಿಮಾನಿಗಳನ್ನು ಅಗಲಿದ್ದಾರೆ.

ಸಂಜೆಯ ತನಕ ಸಂಸ ರಂಗಮಂದಿರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬಳಿಕ ಅವರ ಇಚ್ಛೆಯಂತೆ ಎಂ ಆರ್ ರಾಮಯ್ಯ ಮೆಡಿಕಲ್ ಕಾಲೇಜಿಗೆ ದೇಹದಾನ ಮಾಡಲಾಗುವುದು ಎಂದು ಅವರ ಕುಟುಂಬ ತಿಳಿಸಿದೆ.
—– ——— ——–

ನಾಡೋಜ ಪ್ರೊ. ಕಮಲಾ ಹಂಪನಾ

ತಮ್ಮ ಅಧ್ಯಯನ, ಅಧ್ಯಾಪನ, ಲೇಖನ,ಭಾಷಣ ಮತ್ತು ಸಂಶೋಧನೆಗಳಿಂದ 60 ವರ್ಷಗಳಕಾಲ ಸಾಹಿತ್ಯ ಕ್ಷೇತ್ರದಲ್ಲಿ ಅವಿರತವಾಗಿ ಕೃಷಿ ಮಾಡುತ್ತಾ ಬಂದಿರುವ ಪ್ರೊ.ಕಮಲಾ ಹಂಪನಾ ಅವರು ಸಮಕಾಲೀನ ಕನ್ನಡ ಸಾಹಿತ್ಯದ ಹಿರಿಯ ಬರಹಗಾರ್ತಿ.ಅವರ ಧೀರ್ಘಕಾಲಿಕ ಹಾಗೂ ಮೌಲಿಕ ಕೊಡುಗೆಗೆ ಸಂದ ಗೌರವಗಳಲ್ಲಿ ಪ್ರಮುಖವಾದುವು ಮೂಡುಬಿದರೆಯಲ್ಲಿ ನಡೆದ ಅಖಿಲ ಭಾರತ 71ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ, ಸರ್ಕಾರದ ಪುರಸ್ಕಾರವಾದ ದಾನಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ ಹಾಗೂ ಹಂಪಿ ಕನ್ನಡ ವಿಶ್ವವಿದ್ಯಾಲಯವು ಕೊಡಮಾಡುವ ನಾಡೋಜ ಪ್ರಶಸ್ತಿ. ಡಾ.ಕಮಲಾ ಹಂಪನಾ ಅವರ ಬರವಣಿಗೆಯ ಹರಹು ದೊಡ್ಡದು. ಅವರ ಸಮಗ್ರ ಸಾಹಿತ್ಯವನ್ನು ಒಳಗೊಂಡ ಒಂಬತ್ತು ಬೃಹತ್ ಸಂಪುಟಗಳು ಹೊರಬಂದಿವೆ. ಸಂಶೋಧನೆ ಅವರ ಮೊದಲ ಆಯ್ಕೆ. ಪ್ರಕಟವಾದ 60ಕ್ಕೂ ಹೆಚ್ಚು ಕೃತಿಗಳಲ್ಲಿ ಸೃಜನಕೃತಿಗಳೂ ಸೇರಿವೆ. ನಾಟಕ, ಕತೆಗಳು ಮತ್ತು ವಚನಗಳಲ್ಲಿ ಸೃಷ್ಟಿಶಕ್ತಿಯ ವಿನ್ಯಾಸ ಕೆನೆಕಟ್ಟಿದೆ. ಬಿಂದಲಿ, ಬುಗುಡಿ ಹಾಗೂ ಬಯಲು ಇವು ಆಧುನಿಕ ವಚನಗಳಿರುವ ಸಂಕಲನಗಳು. ಇವಲ್ಲದೆ Attimabbe and Chalukyas, ಹಾಗೂ Jainism and Other Essays- ಎಂಬ ಎರಡು ಇಂಗ್ಲಿಷ್ ಪುಸ್ತಕಗಳನ್ನು ರಚಿಸಿದ್ದಾರೆ.

ಜೀವಪರ ಸಂವೇದನೆ, ಸಾಮಾಜಿಕ ಬದ್ಧತೆ, ಸಾಂಸೃತಿಕ ಕಾಳಜಿಯನ್ನು ಪ್ರಭಾವಶಾಲಿಯಾಗಿ ಬಿಂಬಿಸುವಕಮಲಾ ಹಂಪನಾ ಕನ್ನಡದ ಹೆಮ್ಮೆ. ಕರ್ನಾಟಕ ಸರ್ಕಾರ ಅವರ ಸಾಕ್ಷ್ಯಚಿತ್ರವನ್ನು ಸಿದ್ಧಪಡಿಸಿದೆ. ಇವೆಲ್ಲದಕ್ಕೂ ಕಿರೀಟಪ್ರಾಯವಾಗಿದೆ – ಜಗತ್ತಿನ ಅಯ್ದು ಆದರ್ಶ ಜೋಡಿಗಳನ್ನು ಆಧರಿಸಿ ಜರ್ಮನಿಯ ಯಾಸೇಮಿನ್ ನಿರ್ದೇಶಿಸಿರುವ ಅಂತರರಾಷ್ಟ್ರೀಯ ಸಾಕ್ಷ್ಯಚಿತ್ರದಲ್ಲಿ ಇಡೀ ಭಾರತದ ಪರವಾಗಿ ಕಮಲಾ-ಹಂಪನಾ ಜೋಡಿ ಆಯ್ಕೆಯಾಗಿ ಸೇರಿರುವುದು. ಅವರು ಪಟ್ಟ ಶ್ರಮ, ನಡಸಿದ ನಿರಂತರ ಹೋರಾಟ, ಮಾಡಿದ ಸಾಧನೆಗಳು ಹಲವಾರು. ಅವರ ಪರಿಶ್ರಮದ ಫಲವಾಗಿ —1. ಕರ್ನಾಟಕ ಸರ್ಕಾರ ಪ್ರತಿವರ್ಷ ಲೇಖಕಿಯೊಬ್ಬರಿಗೆ ಮೂರು ಲಕ್ಷರೂಪಾಯಿ ನಗದನ್ನೂ ಒಳಗೊಂಡ ದಾನಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿಯನ್ನು ನೀಡುತ್ತಿದೆ.2. ಮಹಿಳಾ ವಿಶ್ವವಿದ್ಯಾಲಯ ಸಾಕಾರಗೊಂಡಿತು. 3. ವೀರಮಹಿಳೆ ರಾಣಿ ಅಬ್ಬಕ್ಕದೇವಿಯ ಪ್ರತಿಮೆ ಪ್ರತಿಷ್ಠಾಪನೆಗೊಂಡಿತು.ಇತ್ಯಾದಿ.

“ ಬೇರು ಬೆಂಕಿ ಬಿಳಲು “ ಬೃಹದ್ಗ್ರಂಥ ಕಮಲಾ ಹಂಪನಾ ಅವರ ಜೀವನಯಾನದ ಹೃದಯಸ್ಪರ್ಶಿ ಸಂಕಥನ

‍ಲೇಖಕರು avadhi

22 June, 2024

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading