ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

’ಗೆಳೆಯಾ, ಕಳವಳಿಸಬೇಡ. ನೀನೆನಗೆ ಪರಮಗುರುವಾದೆ…’ – ಉಷಾ ಕಟ್ಟೆಮನೆ ಕವಿತೆ

ನಿನಗೆ ನಮೋ ನಮಃ..!

ಉಷಾ ಕಟ್ಟೆಮನೆ

ಧ್ಯಾನ ಕೇಂದ್ರಕ್ಕೆ ಹೊರಟು ನಿಂತಿದ್ದೇನೆ.
ಗುರುಕಾಣಿಕೆಯೊಂದನ್ನು ಅರ್ಪಿಸಬೇಕಾಗಿದೆ.
’ವರ್ಣ ಮಾತ್ರಂ ಕಲಿಸಿದಾತಂ ಗುರು’
ನೀ ಬದುಕ ಪಥ ಬದಲಿಸಿದ ಮಹಾಗುರು !
 
ಹಗ್ಗದ ಮೇಲಿನ ನಡಿಗೆ…
’ಹಾಳಾಗಿ ಹೋಗು’ ಕಿರುಚಿದ ಬುದ್ದನಂತಿದ್ದ ನಿಯಂತ್ರಕ.
ಕೈಯ್ಯಲ್ಲಿದ್ದ ಕೋಲು ಜಾರಿತು.
ಆಯುಧಶಾಲೆಯಲ್ಲಿ ಉದಿಸಿದ ಚಕ್ರರತ್ನ ಗಾಳಿಯಲ್ಲಿ ತೇಲಿ ಬಂದು
ಅನಾಹತವನ್ನು ಬೇಧಿಸಿ
ಕಿವಿಗೆ ಕಾದ ಸೀಸವಾಗಿ, ಎದೆಗೆ ಚೂರಿಯ ಅಲಗಾಗಿ
ಇರಿಯುತ್ತಿದ್ದಂತೆ ಚಿತ್ತಬಿತ್ತಿಯಲ್ಲಿ ತಕ ತಕನೆ ಕುಣಿಯುತ್ತಿದ್ದ ನೀಲಾಂಜನೆ
’ಬೋಂಕನೆ’ ಮಾಯವಾಗಿ ಈ ಗೆಳೆತನವೇ ನಶ್ವರವೆನಿಸಿ
ಮೋಹದ ಕನ್ನಡಕವನ್ನು ಬಿಸುಟು ಪುಸ್ತಕದ ಕಪಾಟಿನತ್ತ ನಡೆದೆ.
ಭ್ರಮೆಯ ಪ್ರಪಂಚದಿಂದ ರಕ್ತ ಮಾಂಸದ ವಾಸ್ತವ ಜಗತ್ತಿಗೆ.
 
’ಹಾಳಾಗಿ ಹೋಗು’ ಎಂದೂ ಹೇಳಿದವಳಲ್ಲ; ಹೇಳಿಸಿಕೊಂಡವಳಲ್ಲ.
ತೂಕ ತಪ್ಪಿದ ನನ್ನ ನಡೆಗೆ ಲಜ್ಜೆಯೆನಿಸಿ ಭೂಮಿಗಿಳಿದು ಬೀಜವಾದೆ.
ಸೂರ್ಯರಶ್ನಿಗಾಗಿ ಹಂಬಲಿಸಿ, ಪಂಚಾಗ್ನಿಯಲ್ಲಿ ಬೆಂದೆ.
ಮಿತ್ರನಿಗೆ ವಂದಿಸಿ, ಆಲಂಗಿಸಿ, ಇಳೆಗೆ ಹಣೆ ಹಚ್ಚಿ
ಪೂರಕ, ಕುಂಭಕ, ರೇಚಕಗಳಲ್ಲಿ ಪ್ರಾಣಶಕ್ತಿಯನ್ನು ನಾಡಿಗಳಲ್ಲಿ ಹರಿಸಿ
ತಲೆಯೆತ್ತಿದಾಗ ಕಂಡದ್ದು ವರ್ಷಗಳ ಹಿಂದೆ ಮರೆತಿದ್ದ ಧ್ಯಾನ ಕೇಂದ್ರ.
ಹೊರಟಿದ್ದೇನೆ…..
 
ಗೆಳೆಯಾ, ಕಳವಳಿಸಬೇಡ. ನೀನೆನಗೆ ಪರಮಗುರುವಾದೆ .
ಪೋಲಾಗುತ್ತಿದ್ದ ಶಕ್ತಿಯನ್ನು ಮತ್ತೆ ಸಂಚಯಿಸಲು ದಾರಿ ದೀಪವಾದೆ.
ಮೊಣಕಾಲೂರಿದ್ದೇನೆ; ನಿನಗೆ ನಮೋ ನಮಃ.!

‍ಲೇಖಕರು avadhi

13 August, 2013

1 Comment

  1. Swarna

    ಪೋಲಾಗುತ್ತಿದ್ದ ಶಕ್ತಿಯನ್ನು ಮತ್ತೆ ಸಂಚಯಿಸಲು ದಾರಿ ದೀಪವಾದೆ…nice thought.
    chennaagide

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading