ಎಷ್ಟು ಊರುಗಳು, ಎಷ್ಟು ಮನೆಗಳು…! ಎಷ್ಟು ಊರುಗಳ ಎಷ್ಟು ಬಗೆಯ ನೀರುಗಳು…! ಎಷ್ಟೆಲ್ಲ ಮಾತೆಯರ ಕೈತುತ್ತಿನ ರುಚಿಗಳು…! ಎಷ್ಟೆಲ್ಲ ಹಿರಿಯರ ‘ಕೈಹಿಡಿದು ಮುನ್ನಡೆಸುವಿಕೆ’ಗಳು…! ಎಷ್ಟೆಲ್ಲ ನೋಟಗಳು, ಎಷ್ಟೆಷ್ಟು ಆಟಗಳು…! ಎಷ್ಟೊಂದು ತರಹದ ‘ಪಾಠ’ಗಳು…! ಎಷ್ಟೊಂದು ರೀತಿಯ ‘ಅನುಭವ’ಗಳು…!
ಆದದ್ದೆಲ್ಲಾ ಒಳಿತೇ ಆಯಿತು…
ಈ ನನ್ನ ‘ವಿದ್ಯಾಯಾನ’ದ ಮೊದಲ ನಿಲ್ದಾಣವೇ ಧಾರವಾಡ…
ಧಾರವಾಡ… !
ಹೆಸರು ಕೇಳಿದ ಕೂಡಲೇ ಬೇಂದ್ರೆ, ಬೆಟಗೇರಿ, ಶಂ.ಬಾ., ಮನಸೂರ, ಕಣವಿಯವರ ಚಿತ್ರಗಳು ನಿಮ್ಮೆದುರು ಕುಣಿಯುತ್ತವೆ ಎಂಬುದು ನನಗೆ ಗೊತ್ತು. ಹಾಗೆಯೇ ಅಲ್ಲಿಯ ಲೈನ್ ಬಜಾರ್ ಪೇಡಾ ನೆನಪಾಗಿ ನಾಲಿಗೆ ನೀರೂರುತ್ತದೆ…
ಬನ್ನಿ, ನಾನೀಗ ನಿಮ್ಮನ್ನು ಸುಮಾರು ಐವತ್ತು ವರ್ಷಗಳ ಹಿಂದಿನ ಧಾರವಾಡಕ್ಕೆ ಕರೆದೊಯ್ಯುತ್ತೇನೆ. ‘ಮಲೆನಾಡಿನ ಸೆರಗು’ ಎಂದೇ ಪ್ರಸಿದ್ಧವಾದ ಧಾರವಾಡಕ್ಕೆ.
‘ವಿದ್ಯಾನಗರಿ’ ಎಂಬ ಬಿರುದು ಹೊತ್ತ ಧಾರವಾಡಕ್ಕೆ.
‘ಏಳು ಮರಡಿಗಳ ಮೇಲಿರುವ ಊರು’ ಈ ಧಾರವಾಡ. ಮರಡಿ ಅಥವಾ ಮೊರಡಿ ಎಂದರೆ ಬೆಟ್ಟಕ್ಕಿಂತ ಚಿಕ್ಕದು, ದಿಬ್ಬಕ್ಕಿಂತ ದೊಡ್ಡದು. ಅದೇ ಆಡುಮಾತಿನಲ್ಲಿ ‘ಮಡ್ಡಿ’ಯಾಗಿದೆ. ನಿಮ್ಮಲ್ಲಿ ಅನೇಕರಿಗೆ ಧಾರವಾಡದ ಮಾಳಮಡ್ಡಿ ಪ್ರದೇಶ ಗೊತ್ತು ಎಂದು ಭಾವಿಸಿದ್ದೇನೆ. ಹಿರಿಯ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಪಟು ಬಸವರಾಜ ರಾಜಗುರುಗಳು ಇದ್ದದ್ದು… ಹಿರಿಯ ವಿಮರ್ಶಕ ಲೇಖಕ ಶಂಕರ ಮೊಕಾಶಿ ಪುಣೇಕರ್ ವಾಸಿಸಿದ್ದು… ಹಿಂದಿ ಚಿತ್ರ ರಂಗದಲ್ಲಿ ಮನೆಮಾತಾಗಿ ಮೆರೆದ ‘ಲೀನಾ ಚಂದಾವರಕರ್’ ಹುಟ್ಟಿ ಬೆಳೆದದ್ದು ಇಲ್ಲಿಯೇ, ಈ ಮಾಳಮಡ್ಡಿಯೇ …
ಇಲ್ಲಿಯ ಸುತ್ತಮುತ್ತಲಿನ ಭೂಮಿಯಲ್ಲಿ ‘ಮಮತೆ’ ತುಂಬಿದೆ. ಅದು ಅನುಭವಕ್ಕೆ ಬರಬೇಕೆಂದರೆ ನೀವು ಮಾವಿನ ಹಣ್ಣಿನ ಸೀಜನ್ನಿನಲ್ಲಿ ಇಲ್ಲಿಗೆ ಬರಬೇಕು. ನಿಮ್ಮ ತಲೆಗೆ ತಾಗುವಷ್ಟು ಎತ್ತರದಲ್ಲೇ ಮಾವಿನ ಪಾಡುಗಾಯಿಗಳು ಒಲವಿನಿಂದ ಓಲಾಡುತ್ತಿರುತ್ತವೆ. ಇದು ‘ಕಲ್ಮಿ’ ಮಾವು. ಉಳಿದ ದಿನಗಳಲ್ಲಾದರೆ ನವಲೂರ ಪೇರಳೆಯಂತೂ ಇದ್ದೇ ಇದೆ. ಬಂಗಾರ ಬಣ್ಣದ ಹಣ್ಣನ್ನು ಕತ್ತರಿಸಿದರೆ ಒಳಗೆಲ್ಲ ಗಾಢ ಗುಲಾಬಿ ಬಣ್ಣದ ತಿರುಳು… ಜೊತೆಗೆ ಅದರದೇ ಆದ ಘಮ… !
ಅರೆ, ‘ಕೆರೆಗಳು’ ಎನ್ನುತ್ತೀರಿ, ಯಾವುದೋ ಕೇರಿಗಳ ಹೆಸರು ಹೇಳುತ್ತಿದ್ದೀರಿ ಎಂದು ಗೊಣಗಬೇಡಿ. ನಮ್ಮಲ್ಲಿ ಮರಾಠಿಯ ಪ್ರಭಾವದಿಂದಾಗಿ ಎಳೆದೆಳೆದು ಹೇಳುವ ಚಟ ಬೆಳೆದು ಬಿಟ್ಟಿದೆ. ಆ ಜನ ಹಾಗೆಯೇ. ‘ಪೆನ್’ ಅವರ ಬಾಯಲ್ಲಿ ‘ಪೇನ್’ ಆಗುವುದನ್ನು ಕೇಳುವಾಗ ನಮಗೆ ನಿಜವಾಗಿಯೂ ನೋವಾಗುತ್ತದೆ. ನಾವು ‘ಟೆಸ್ಟ್’ ಮಾಡಲು ಕುಳಿತರೆ, ಅವರು ‘ಟೇಸ್ಟ್’ ಮಾಡತೊಡಗುತ್ತಾರೆ. ಇರಲಿ. ಧಾರವಾಡದ ಕೆರೆಗಳ ಬಗ್ಗೆ ಹೇಳುತ್ತಿದ್ದೆ. ಇಲ್ಲಿದ್ದ ಕೆರೆಗಳ ಪೈಕಿ ಲೈನ್ ಬಜಾರಿನ ಹತ್ತಿರವಿದ್ದ ಕೆಂಪೀಗೇರಿ ಮತ್ತು ಊರ ನಡುವಿದ್ದ ಹಾಲಗೇರಿಗಳು ವಿಸ್ತಾರದಲ್ಲಿ ಬಲು ದೊಡ್ಡವು.
ನೀವು ಧಾರವಾಡದ ಹಳೆಯ ಬಸ್ ನಿಲ್ದಾಣದಿಂದ ಹೊರಗೆ ಬಂದು ಬಲಕ್ಕೆ ಹೊರಳಿ ಹಾಗೇ ಸಾಗಿದರೆ ಸಿಗುವುದೇ ಸುಭಾಸ ರಸ್ತೆ. ಅದರ ಎಡಕ್ಕೆ ಅಂಗಡಿಸಾಲುಗಳ ಹಿಂದೆ ಬಲು ವಿಸ್ತಾರವಾಗಿ ಹರಡಿಕೊಂಡ ತರಕಾರಿ ಮಾರುಕಟ್ಟೆ ಕಾಣುತ್ತದೆ. ಈ ಪ್ರದೇಶ ಆ ಕಾಲಕ್ಕೆ ಒಂದು ದೊಡ್ಡ ಕೆರೆ. ಹೆಸರು ‘ಹಾಲಗೇರಿ’. ಅದನ್ನು ಎಡಕ್ಕಿಟ್ಟುಕೊಂಡೇ ಮುನ್ನಡೆದರೆ ನೀವು ಗಾಂಧೀ ಚೌಕ ಎಂಬಲ್ಲಿಗೆ ಬರುತ್ತೀರಿ. ಇಲ್ಲಿ ರಸ್ತೆ ಮೂರು ಟಿಸಿಲೊಡೆಯುತ್ತದೆ… ನೇರ ಹೋದರೆ ಮಂಗಳವಾರ ಪೇಟೆ. ಬಲಕ್ಕೆ ಹೊರಳಿ ಮುಂದುವರಿದರೆ ಹೊಸ ಯಲ್ಲಾಪುರ. ಚೌಕದ ಎಡ ರಸ್ತೆಯತ್ತ ತಿರುಗಿದರೆ ಸಿಗುವುದೇ ‘ಕೆರೀ ತೆಳಗಿನ ಓಣಿ.’ (‘ಕೆಳಗಿನ’ ಎಂಬುದು ನಮ್ಮವರ ಬಾಯಲ್ಲಿ ‘ತೆಳಗಿನ’ ಆಗಿದೆ.) ಕೆರೆಗೆ ಅತಿ ಸಮೀಪವಿದ್ದ ಕಾರಣ ಇಲ್ಲಿಯ ಮನೆಗಳೆಲ್ಲ ಆಗ ಸದಾ ತಂಪಿನ ತಾಣವಾಗಿರುತ್ತಿದ್ದವು. ನೆಲಕ್ಕೆ ಕಲ್ಲು ಹಾಸು ಇದ್ದರಂತೂ ಅಲ್ಲಿ ಕಾಲುಗಳು ಜುಮುಗುಡುವಷ್ಟು ತಂಪು. ನೆಲಮಟ್ಟದಿಂದ ಸ್ವಲ್ಪ ಮೇಲಿದ್ದ ಮನೆಗಳಲ್ಲಿ ಈ ಸಮಸ್ಯೆ ಇರುತ್ತಿರಲಿಲ್ಲ.
ಈ ‘ಕೆರೀ ತೆಳಗಿನ ಓಣಿ’ಯ ಮೂಲಕ ಹಾದು ಹೋಗುವ ರಸ್ತೆಗೆ ‘ಶಿವಾಜಿ ಬೀದಿ’ ಅಥವಾ ‘ಶಿವಾಜಿ ರಸ್ತೆ’ ಎಂದು ಹೆಸರು.
ಈ ಬೀದಿಯಲ್ಲೇ ಶುರುವಾಯಿತು ನನ್ನ ‘ವಿದ್ಯಾಯಾನ’…
ಬನ್ನಿ… 1964ರ ಅವಧಿಯ ಶಿವಾಜಿ ಬೀದಿಗೆ ಹೋಗೋಣ.
ಆಗ ಈ ಬೀದಿಯಲ್ಲಿದ್ದ ‘ರಿಸ್ಬೂಡ್ ಚಾಳ್ ‘ನಲ್ಲಿದ್ದರು ವೇದಬ್ರಹ್ಮ ಮಹಾದೇವ ಭಟ್ಟ ಸದರ ಜೋಶಿಯವರು. ನನ್ನ ‘ವಿದ್ಯಾಯಾನ’ದ ಯೋಜನೆಯನ್ನು ರೂಪಿಸಿದವರೇ ಈ ಮಹಾದೇವ ಭಟ್ಟರು. ಅವರ ಧರ್ಮಪತ್ನಿಯೇ ನಮ್ಮ ಸೋದರತ್ತೆ. ಆಕೆ ನನಗೆ ಒಂದರ್ಥದಲ್ಲಿ ಅಜ್ಜಿಯೂ ಹೌದು. ನನ್ನ ಅವ್ವನ ದೊಡ್ಡಮ್ಮ. (‘ಸದ್ದು ಮಾಡುವ ರೊಟ್ಟಿ’ ನೆನಪಿಸಿಕೊಳ್ಳಿ. ನನ್ನ ಅವ್ವನನ್ನು ಕಿಲ್ಲೆಗೆ ಕರೆದೊಯ್ದು ಸ್ಪರ್ಧೆಯಲ್ಲಿ ಭಾಗವಹಿಸುವಂತೆ ಮಾಡಿದ್ದವಳು ಇದೇ ಅಜ್ಜಿ.) ದಂಪತಿ ಇಬ್ಬರೂ ಧಾರಾಳಿಗಳು.
ಮಹಾದೇವ ಭಟ್ಟರ ಹಿರಿಯ ಮಗ ತಮ್ಮಣ್ಣ ಮಾಮಾ… ಪ್ರಾಥಮಿಕ ಶಾಲಾ ಮಾಸ್ತರ್. ಆತ ಕೆಲಸ ಮಾಡುತ್ತಿದ್ದ ಶಾಲೆಯಲ್ಲೇ ನನ್ನನ್ನೂ ಸೇರಿಸಿದ್ದಾಯಿತು.
ಆಯಿತಲ್ಲ, ಮತ್ತಿನ್ನೇನು ಬೇಕು…?ಆ ವರ್ಷದ ಮೇ 27ರಂದು ಶುರುವಾಯಿತು ಶಾಲೆ…
ಅದನ್ನು ಮುಗಿಸಿಕೊಂಡು ಬರುತ್ತಿದ್ದಂತೆಯೇ ಮುಖ್ಯಗುರುಗಳು ಒಳಗೆ ಬಂದರು. ಶುಭ್ರ ಮಲ್ಲಿಗೆಯಂಥ ಬಿಳಿ ಧೋತರ, ಬಿಳಿ ಜುಬ್ಬಾ, ಬಿಳಿ ಗಾಂಧೀ ಟೋಪಿ ಧರಿಸಿದ್ದ ಅವರ ಹೆಸರು ‘ಮಲ್ಲಿಗವಾಡ ಮಾಸ್ತರು’ ಅಂತ.
ನಾವೆಲ್ಲ ಒಕ್ಕೊರಲಿನಿಂದ ”ಚಾಚಾ ನೆಹರೂರೀ ಸsರs…” ಎಂದು ಉತ್ತರಿಸಿದೆವು.
ಅವರು ಗದ್ಗದಿತರಾದರು. ದುಃಖಿಸುತ್ತಲೇ, ”ಮಕ್ಕಳೇ… ಇವತ್ತು ನಿಮ್ಮೆಲ್ಲರ ಪ್ರೀತಿಯ ಚಾಚಾ ನೆಹರೂ ನಿಧನರಾಗಿದ್ಡಾರೆ… ಅದಕ್ಕೇ ನಿಮಗೆಲ್ಲ ಸಾಲಿ ಸೂಟಿ…” ಎಂದರು.ಸೂಟಿ, ರಜೆ ಎಂದರೆ ಯಾರಿಗೆ ತಾನೇ ಖುಷಿಯಾಗುವುದಿಲ್ಲ…? ದೊಡ್ದವರೇ ‘ಹೋ’ ಎಂದು ಹಾರಾಡಿ ಬಿಡುತ್ತಾರೆ. ಅಂಥದರಲ್ಲಿ ನಾವು ಮಕ್ಕಳು…
ಅದು ಗೊತ್ತಿದ್ದ ಮಲ್ಲಿಗವಾಡ ಮಾಸ್ತರರು, ”ಗದ್ಲಾ ಮಾಡದ ಮನೀಗೆ ಹೋಗ್ರಿ… ನಾಳೆ, ನಾಡದ, ಅಚ್ಚೀ ನಾಡದ ಪೇಪರಿನ್ಯಾಗ ಬರೋ ಸುದ್ದೀ ಓದ್ರಿ.
ನಿಮ್ಮ ಪ್ರೀತಿಯ ಚಾಚಾ ನೆಹರೂ ಅವರ ಬಗ್ಗೆ ಒಂದೊಂದು ಪುಟದಷ್ಟು ನಿಬಂಧ ಬರಕೊಂಡು ಬರ್ರಿ…”
ನಾನು ಶಾಲೆಯಲ್ಲಿ ಕಾಲಿಟ್ಟ ‘ಗಳಿಗೆ’ಯೇ ಸರಿ ಇರಲಿಲ್ಲವೇನೋ…
sir masta baradiri nodri.. ivaga kelasa hudkondu bengalorege bandu ille onda presslli work madaktteni. sir illige bandu bhaala baragetteni.. yak antiri enri ena jana ri nettaga kannada maatadaaka olle antaara .. modal namm maatinyag mulaaja irangil.. adre nimm lekhana odovaaga namma avvan kaiyagin rotti tindanga aitu,, super sir,,, am waiting for your next article…..
Thank you sir…
ಮುಂದಿನ ಕಂತಿಗೆ ಎದುರು ನೋಡುತ್ತಿದ್ದೇನೆ.
Nannuru Malamaddi Kannige kattinang aayitu. Gopalanna mattomme yedurige ba !