ಜಿಲ್ಲೆಯ ಸೇಡಂ ತಾಲೂಕಿನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದಿಂದ ಕೊಡಮಾಡುವ ʼಅಮ್ಮ ಗೌರವʼ ಪುರಸ್ಕಾರಕ್ಕೆ ಐವರು ಸಾಧಕರನ್ನು ಆಯ್ಕೆ ಮಾಡಲಾಗಿದೆ ಎಂದು ಸಂಚಾಲಕಿ ರತ್ನಕಲಾ ಮಹಿಪಾಲರೆಡ್ಡಿ ತಿಳಿಸಿದ್ದಾರೆ.
ಕಳೆದ 11 ವರ್ಷಗಳ ಹಿಂದೆ ಆರಂಭಗೊಂಡ ‘ಅಮ್ಮ ಗೌರವ ಪುರಸ್ಕಾರ’ಕ್ಕೆ ಈ ಬಾರಿಯೂ ನಾಡು-ನುಡಿಗೆ ನೀಡಿದ ಕೊಡುಗೆಯನ್ನು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಮಾಡಿದ ಗಣನೀಯ ಸಾಧನೆಯನ್ನು ಗುರುತಿಸಿ ಸತ್ಕರಿಸಲಾಗುತ್ತದೆ.
ಈ ಬಾರಿಯ ‘ಅಮ್ಮ ಗೌರವ ಪುರಸ್ಕಾರ’ಕ್ಕೆ ಬೀದರ್ ಜಿಲ್ಲೆಯ ಹಿರಿಯ ಲೇಖಕ ದೇಶಾಂಶ ಹುಡಗಿ, ಸೇಡಂನ ಶಿಕ್ಷಣ ಪ್ರೇಮಿ ಡಾ. ನಾಗರೆಡ್ಡಿ ಪಾಟೀಲ್, ಧುರೀಣರಾದ ಎಂ ನಾಗಪ್ಪ, ಹಿರಿಯ ಪತ್ರಕರ್ತ ಪಿ ಎಂ ಮಣೂರ ಹಾಗೂ ಕಿಡ್ನಿ ದಾನಿ ರೇಖಾಬಾಯಿ ಪಿ ಅರಗಲಮನಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಈ ಕಾರ್ಯಕ್ರಮವು ನ. 26ರಂದು ಸಂಜೆ 5.30ಕ್ಕೆ ಸೇಡಂನ ಶ್ರೀ ಪಂಚಲಿಂಗೇಶ್ವರ ದೇವಾಲಯದ ಶಾಂಭವಿ ರಂಗಮಂಟಪದಲ್ಲಿ ಆಯೋಜಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಪ್ರಶಸ್ತಿ ಪ್ರದಾನ ಕಾರ್ಯಕ್ರಮ:
‘ಅಮ್ಮ ಪ್ರಶಸ್ತಿ’ ಪ್ರದಾನ ಸಮಾರಂಭದ ಸಾನಿಧ್ಯವನ್ನು ನಾಲವಾರ ಶ್ರೀ ಕೋರಿಸಿದ್ದೇಶ್ವರ ಸಂಸ್ಥಾನ ಮಠದ ಪೂಜ್ಯ ಡಾ. ಸಿದ್ದತೋಟೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳು ಹಾಗೂ ಸೇಡಂನ ಶ್ರೀ ಕೊತ್ತಲ ಬಸವೇಶ್ವರ ದೇವಾಲಯದ ಪೂಜ್ಯ ಶ್ರೀ ಸದಾಶಿವ ಮಹಾಸ್ವಾಮಿಗಳು ವಹಿಸುವರು.
ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷರೂ ಆಗಿರುವ ಸೇಡಂ ಶಾಸಕ ರಾಜಕುಮಾರ ಪಾಟೀಲ್ ತೆಲ್ಕೂರ ಕಾರ್ಯಕ್ರಮವನ್ನು ಉದ್ಘಾಟಿಸುವರು. ಲೋಕಸಭಾ ಸದಸ್ಯ ಡಾ. ಉಮೇಶ ಜಾಧವ ಮುಖ್ಯ ಅತಿಥಿಗಳಾಗಿರುವರು. ಕಲಬುರಗಿ ರಂಗಾಯಣ ಅಧ್ಯಕ್ಷ ಪ್ರಭಾಕರ ಜೋಶಿ ಪ್ರಶಸ್ತಿ ಪ್ರದಾನ ಮಾಡುವರು. ಮಾಜಿ ಸಚಿವ ಡಾ. ಶರಣಪ್ರಕಾಶ ಪಾಟೀಲ ಅಧ್ಯಕ್ಷತೆ ವಹಿಸುವರು.
ಇದೇ ಸಂದರ್ಭದಲ್ಲಿ ಇಬ್ಬರು ಮಹಿಳೆಯರಿಗೆ ಸ್ವಾವಲಂಬಿ ಬದುಕಿಗಾಗಿ ನಿವೃತ್ತ ಮೇಷ್ಟ್ರು ನಾಗಪ್ಪ ಮುನ್ನೂರ್ ಸ್ಮರಣಾರ್ಥ ಹೊಲಿಗೆ ಮಿಷಿನ್ಗಳನ್ನು ವಿತರಿಸಲಾಗುವುದು ಎಂದು ಸಂಚಾಲಕಿ ರತ್ನಕಲಾ ಮಹಿಪಾಲರೆಡ್ಡಿ ತಿಳಿಸಿದ್ದಾರೆ.
0 ಪ್ರತಿಕ್ರಿಯೆಗಳು