ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ನಿಮ್ಮ ನೆನಪೇ ನನ್ನ ಹಿಂಡುವುದು ಹಗಲಿನಲಿ…


 

ತೌರಸುಖದೊಳಗೆನ್ನ ಮರೆತಿಹಳು ಎನ್ನದಿರಿ

ರಚನೆ: ಕೆ.ಎಸ್. ನರಸಿಂಹಸ್ವಾಮಿ
ಕವನ ಸಂಕಲನ: ಮೈಸೂರು ಮಲ್ಲಿಗೆ

ತೌರಸುಖದೊಳಗೆನ್ನ ಮರೆತಿಹಳು ಎನ್ನದಿರಿ
ನಿಮ್ಮ ಪ್ರೇಮವ ನೀವೇ ಒರೆಯನಿಟ್ಟು
ನಿಮ್ಮ ನೆನಸೇ ನನ್ನ ಹಿಂಡುವುದು ಹಗಲಿನಲಿ
ಇರುಳಿನಲಿ ಕಾಣುವುದು ನಿಮ್ಮ ಕನಸು
 
ಬೃಂದಾವನದ ಹಣೆಗೆ ಕುಂಕುಮವನಿಡುವಾಗ
ಕಾಣುವುವು ಶ್ರೀತುಳಸಿ ಕೃಷ್ಣತುಳಸಿ
ನೀಲಾಂಬರನ ನಡುವೆ ಚಂದಿರನು ಬಂದಾಗ
ರೋಹಿಣಿಯು ಬೆಳಗುವಳು ಸನ್ನಿಧಿಯಲಿ
 
ತೌರಸುಖದೊಳಗೆನ್ನ ಮರೆತಿಹಳು ಎನ್ನದಿರಿ…
 
ತಾಯಡಿಗೆ ರುಚಿಯೆಂದು ನಾನಿಲ್ಲಿ ಕುಳಿತಿಲ್ಲ
ಇನ್ನು ತಂಗಿಯ ಮದುವೆ ತಿಂಗಳಿಹುದು
ತೌರಪಂಜರದೊಳಗೆ ಸೆರೆಯಾದ ಗಿಳಿಯಲ್ಲ
ಐದು ತಿಂಗಳ ಕಂದ ನಗುತಲಿಹುದು
 
ತೌರಸುಖದೊಳಗೆನ್ನ ಮರೆತಿಹಳು ಎನ್ನದಿರಿ…
 
ಚಿತ್ರದುರ್ಗದ ರೈಲು ನಿತ್ಯವೂ ಓಡೋಡಿ
ಮೈಸೂರ ಸೇರುವುದು ನಾನು ಬಲ್ಲೆ
ನಾಳೆ ಮಂಗಳವಾರ ಮಾರನೆಯ ದಿನ ನವಮಿ
ಆಮೇಲೆ ನಿಲ್ಲುವೆನೇ ನಾನು ಇಲ್ಲಿ
 
ತೌರಸುಖದೊಳಗೆನ್ನ ಮರೆತಿಹಳು ಎನ್ನದಿರಿ…
 
ಮರೆತಿಹಳು ಎನ್ನದಿರಿ ಕಣ್ಮರೆಯ ತೋಟದಲಿ
ಅಚ್ಚ ಮಲ್ಲಿಗೆ ಹೂವು ಅರಳು ಬಿರಿಯುತಿಹುದು
ಬಂದುಬಿಡುವೆನು ಬೇಗ ಮುನಿಯದಿರಿ ಕೊರಗದಿರಿ
ಚುಚ್ಚದಿರಿ ಮೊನೆಯಾದ ಮಾತನೆಸೆದು
 

‍ಲೇಖಕರು G

28 February, 2014

4 Comments

  1. shobha

    thumba kaduva haadu

  2. Anonymous

    atyantapreetiya haadu.

  3. vidya

    ನನ್ನ ಪ್ರೀತಿಯ ಕವಿಯ , ನನ್ನ ಪ್ರೀತಿಯ ಹಾಡನ್ನು ಪ್ರಕಟಿಸಿದ ಅವಧಿಗೆ ಎಷ್ಟು ಧನ್ಯವಾದಗಳನ್ನು ನಾನು ಹೇಳಲಿ.

  4. MohanRao .Kulkarni

    ಭಾವ ಪೂರ್ಣವಾದ ,ಮನಕಲಕುವ ಅರ್ಥವತ್ತಾದ ಹಾಡು

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading