ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಪ್ರೊ ಎಂ ಎಚ್ ಕೃಷ್ಣಯ್ಯ ಇನ್ನಿಲ್ಲ.

ಕರ್ನಾಟಕ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷರಾದ ಪ್ರೊ ಎಂ ಎಚ್ ಕೃಷ್ಣಯ್ಯ ಅವರು ಇಂದು ಮಧ್ಯಾಹ್ನ 1 ಗಂಟೆಗೆ ನಿಧನರಾಗಿದ್ದಾರೆ. ಇವರ ಅಂತಿಮ ಸಂಸ್ಕಾರವನ್ನು ಗಾಯತ್ರಿನಗರದ ಹರಿಶ್ಚಂದ್ರ ಘಾಟಿನಲ್ಲಿ ನಾಳೆ 11ಕ್ಕೆ ನಡೆಯಲಿದೆ.

ಎಂ. ಎಚ್. ಕೃಷ್ಣಯ್ಯಪ್ರೊ. ಎಂ. ಎಚ್. ಕೃಷ್ಣಯ್ಯನವರು ಪ್ರಸಿದ್ಧ ಸಾಹಿತ್ಯ ವಿಮರ್ಶಕರು ಮತ್ತು ಕಲಾಪ್ರೇಮಿಗಳು. ಎಂ. ಎಚ್. ಕೃಷ್ಣಯ್ಯನವರು 1937ರ ಜುಲೈ 21ರಂದು ಮೈಸೂರಿನಲ್ಲಿ ಜನಿಸಿದರು. ಕೃಷ್ಣಯ್ಯನವರ ತಂದೆ ಹುಚ್ಚಯ್ಯನವರು. ತಾಯಿ ಕೆಂಪಮ್ಮ. ಮೈಸೂರು ವಿಶ್ವವಿದ್ಯಾಲಯದಿಂದ ಬಿ. ಎ ಮತ್ತು ಎಂ. ಎ. ಪದವಿಗಳನ್ನು ಪಡೆದ ಕೃಷ್ಣಯ್ಯನವರು ಪ್ರಾಧ್ಯಾಪಕರಾಗಿ ಬೆಂಗಳೂರು, ಕೋಲಾರ, ಮಂಗಳೂರು, ಮಾಗಡಿ ಮುಂತಾದೆಡೆಗಳಲ್ಲಿ ಸರ್ಕಾರಿ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸಿ ನಿವೃತ್ತರಾಗಿದ್ದಾರೆ.

ಕೃಷ್ಣಯ್ಯನವರು ಬರಹಗಾರರು, ಸಂಗೀತಗಾರರು, ಶಿಲ್ಪಿಗಳು, ಕಲಾವಿದರೊಂದಿಗೆ ಬೆರೆತು ಅವರ ಬದುಕನ್ನು ಅರಿತು, ಆ ಅರಿವನ್ನು ತಮ್ಮ ಕೃತಿಗಳ ಮೂಲಕ ಕನ್ನಡ ಸಾಹಿತ್ಯಕ್ಕೆ ಕೊಡುಗೆ ನೀಡಿದ್ದಾರೆ. ಪ್ರಸಿದ್ಧ ವಿದ್ವಾಂಸರೂ, ಶಿಸ್ತಿನ ಪ್ರವಚನಕಾರರೂ ಆದ ಕೃಷ್ಣಯ್ಯನವರ 30ಕ್ಕೂ ಹೆಚ್ಚು ಕೃತಿಗಳು ಪ್ರಕಟವಾಗಿವೆ.

ಸಂಕ್ಷಿಪ್ತ ಕನ್ನಡ ಭಾಷೆಯ ಚರಿತ್ರೆ, ಆರ್. ಎಮ್. ಹಡಪದ್, ರೂಪಶಿಲ್ಪಿ ಬಸವಯ್ಯ, ಶ್ರಂಗಾರ ಲಹರಿ, ಕಲಾ ದರ್ಶನ, ರಂಗಭೂಮಿ ಮತ್ತು ಸೌಂದರ್ಯ ಪ್ರಜ್ಞೆ ಮುಂತಾದ ಬರಹಗಳು ಹಾಗೂ ಕುವೆಂಪು ಸಾಹಿತ್ಯ : ಚಿತ್ರ ಸಂಪುಟದಂತಹ ಸಂಪಾದನೆಗಳು ಈ ಕೃತಿಗಳಲ್ಲಿ ಸೇರಿವೆ. ಅವರ ‘ಕಲಾ ದರ್ಶನ’ ಕೃತಿ ಕನ್ನಡ ನಾಡಿನಲ್ಲಿ ಗೌರವಾನ್ವಿತ ಸಂಪುಟವೆನಿಸಿವೆ.

ಉದಯ ಭಾನು ಕಲಾ ಸಂಘವು ತನ್ನ ಸುವರ್ಣ ಮಹೋತ್ಸವ ಸಂದರ್ಭದಲ್ಲಿ ಹೊರತಂದ ಸುಮಾರು 3000 ಪುಟಗಳ ‘ಬೆಂಗಳೂರು ದರ್ಶನ’ ಬೃಹತ್ ಸಂಪುಟಗಳ ಸಂಪಾದಕರಾಗಿ ಸಹಾ ಅವರು ತಮ್ಮ ಮಹತ್ವದ ಕೊಡುಗೆಯನ್ನು ನೀಡಿದ್ದಾರೆ.

ಕನ್ನಡ ವಿಶ್ವವಿದ್ಯಾಲಯದ ಸಿಂಡಿಕೇಟ್, ಕನ್ನಡ ಪುಸ್ತಕ ಪ್ರಾಧಿಕಾರ, ಕರ್ನಾಟಕ ಸಾಹಿತ್ಯ ಅಕಾಡಮಿ, ತಂಜಾವೂರಿನಲ್ಲಿ ಕೇಂದ್ರ ಹೊಂದಿರುವ ದಕ್ಷಿಣ ಭಾಗೀಯ ಸಾಂಸ್ಕೃತಿಕ ಕೇಂದ್ರ, ಉದಯಭಾನು ಕಲಾ ಸಂಘ, ಮುಂತಾದೆಡೆಗಳಲ್ಲಿ ಅವರು ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸಿದ್ದಾರೆ. ಕರ್ನಾಟಕ ಸಾಹಿತ್ಯ ಅಕಾಡಮಿ ಅಧ್ಯಕ್ಷತೆ ಒಳಗೊಂಡಂತೆ ಹಲವು ರೀತಿಯಲ್ಲಿ ಸಾಹಿತ್ಯ ಸಾಂಸ್ಕೃತಿಕ ಲೋಕದಲ್ಲಿ ಮಹತ್ವದ ಸೇವೆ ಸಲ್ಲಿಸಿರುವ ಪ್ರೊ. ಕೃಷ್ಣಯ್ಯನವರು ತಮ್ಮ ಕಾರ್ಯದಕ್ಷತೆ, ಸರಳ, ಸಜ್ಜನಿಕೆಗಳಿಗೆ ಹೆಸರಾಗಿದ್ದಾರೆ.

ಕೃಷ್ಣಯ್ಯನವರಿಗೆ ‘ಶೃಂಗಾರ ಲಹರಿ’ ಕೃತಿಗೆ ಲಲಿತ ಕಲಾ ಅಕಾಡೆಮಿ ಪುರಸ್ಕಾರ, ‘ಸಂಕ್ಷಿಪ್ತ ಕನ್ನಡ ಭಾಷೆಯ ಚರಿತ್ರೆ’ ಕೃತಿಗೆ ಕರ್ನಾಟಕ ಸಾಹಿತ್ಯ ಅಕಾಡಮಿ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕುವೆಂಪು ಪ್ರಶಸ್ತಿ ಮುಂತಾದ ಹಲವಾರು ಗೌರವಗಳು ಸಂದಿವೆ.

ಹಂಪಿ ವಿಶ್ವವಿದ್ಯಾಲಯವು ‘ನಾಡೋಜ’ ಪ್ರಶಸ್ತಿಯಿತ್ತು ಸಂಮಾನಿಸಿದೆ. ಮಾಸ್ತಿ ಪ್ರಶಸ್ತಿ ಅವರಿಗೆ ಸಂದ ಮತ್ತೊಂದು ವಿಶಿಷ್ಟ ಹಿರಿಮೆ.

ಮಾಹಿತಿ ಕೃಪೆ: ‘ಸಂಸ್ಕೃತಿ ಸಲ್ಲಾಪ’ www.sallapa.com

‍ಲೇಖಕರು avadhi

12 August, 2022

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading