ಬಿ ಎಂ ಬಷೀರ್
ಆತ ರೈತ. ವರ್ಷವಿಡೀ ದುಡಿದು ಭತ್ತ ಬೆಳೆಸಿದ. ಗೋಣಿ ತುಂಬಾ ಅಕ್ಕಿ ಹೊತ್ತುಕೊಂಡು ಸಂತೆಗೆ ನಡೆದ ಯಾಕೋ ಅಕ್ಕಿಗೆ ಬೆಲೆಯೇ ಇಲ್ಲ. ಮಾರಿದ. ಮನೆಗೆ ಮರಳಿದ. ‘‘ಹಸಿವಾಗುತ್ತಿದೆ, ಅನ್ನ ಬಡಿಸು’’ ಎಂದು ಪತ್ನಿಗೆ ಕೂಗಿದ.
‘‘ಮನೆಯಲ್ಲಿ ಅಕ್ಕಿ ಮುಗಿದು ದಿನಗಳಾಗಿವೆ’’ ಅವಳು ನಿಟ್ಟುಸಿರಿಟ್ಟು ನುಡಿದಳು.
#
ಆತ ಕಾರ್ಮಿಕ. ಒಂದು ಸುಂದರ ಮನೆಯನ್ನು ಕಟ್ಟುತ್ತಿದ್ದ. ಹದಿನಾರು ಕೋಣೆಗಳ ಮನೆ. ಒಂದು ಬೃಹತ್ ವರಾಂಡ. ಎರಡು ಅಂತಸ್ತು. ಡೈನಿಂಗ್ ಹಾಲ್, ಗೆಸ್ಟ್ ರೂಂ…ಹೀಗೆ ಬೃಹತ್ ಮನೆಯಾಗಿತ್ತು. ಕೊನೆಗೂ ಕಟ್ಟಿ ಮುಗಿಸಿದ.
‘‘ಅಬ್ಬಾ! ಕೊನೆಗೂ ಮನೆ ಕಟ್ಟಿ ಮುಗಿಯಿತು’’ ಎಂದು ನಿಟ್ಟುಸಿರಿಟ್ಟ. ಕೆಲಸ ಮುಗಿದ ಬಳಿಕ, ರಾತ್ರಿ ಎಲ್ಲಿ ನಿದ್ರಿಸಲಿ ಎಂದು ನಗರದ ಬಸ್ನಿಲ್ದಾಣವನ್ನು ಹುಡುಕತೊಡಗಿದ.
#
ಅವಳು ಆಗಷ್ಟೇ ಹದಿನೈದು ಸುಂದರ ಕುಲಾವಿಯನ್ನು ಹೆಣೆದು ಮುಗಿಸಿ, ತನ್ನ ಮನೆಯ ಯಜಮಾನಿಗೆ ತಂದುಕೊಟ್ಟಳು. ಆ ಮೇಲೆ ನೆಲ ನೋಡುತ್ತಾ ‘‘ಹಳೆಯ ಬಟ್ಟೆ ಏನಾದರೂ ಇದ್ದರೆ ಕೊಡಿ ಅಮ್ಮ. ನನ್ನ ಮಗುವಿಗೆ ಒಂದೇ ಒಂದು ಬಟ್ಟೆಯೂ ಇಲ್ಲ’’ ಎಂದು ಪಿಸುಗುಟ್ಟಿದಳು.




ಸೂಪರ್ ಸಾರ್!
ಅಪಾರ ಅರ್ಥದ ಅತಿ ಚಿಕ್ಕ ಕಥೆಗಳು. ಗ್ರೇಟ್ ಸರ್
Wonderful stories, ondu rithi manasu kalkuva kathegallu.