ಏನೂ ಮಿಸ್ಟೇಕ್ ಆಗ್ಲಿಲ್ಲ
ಹರೀಶ್ ಕೇರ
ಬೆಟ್ಟದ ಮೇಲೆ
ಸಣ್ಣ ಕತೆಗಳನ್ನು ಜೋಡಿಸಿ ನಾಟಕ ರೂಪದಲ್ಲಿ ರಂಗದ ಮೇಲೆ ತರುವುದು ಹೊಸತೇನಲ್ಲ. ಹೀಗೆ ಕತೆಗಳನ್ನು ಜೋಡಿಸಿ ರಂಗರೂಪ ಸಿದ್ಧಪಡಿಸುವಾಗ, ಬಿಡಿ ಕತೆಗಳನ್ನು ಒಂದಾಗಿ ಬೆಸೆಯುವ ಎಳೆಯೊಂದು ಅವುಗಳಲ್ಲಿ ಇರಬೇಕಾದ್ದು ಅವಶ್ಯ. ದೇವನೂರು ಮಹಾದೇವರ ಕತೆಗಳನ್ನು ಜೋಡಿಸಿ ಮಾಡಿದ, ದಲಿತ ಜೀವನದ ಮುಖ್ಯಧಾರೆ ಹೊಂದಿದ್ದ ‘ದ್ಯಾವನೂರು’ ನಾಟಕ ಇಂಥದು. ಸಾದತ್ ಹಸನ್ ಮಾಂಟೋ ಅವರ ಕತೆಗಳ ರಂಗರೂಪ ‘ಮಿಸ್ಟೇಕ್’ ಕೂಡ ಇಂಥದೇ. ದೇಶ ವಿಭಜನೆಯ ದಿನಗಳ ಕರಾಳ ಹಿಂಸೆಯ, ಮನುಷ್ಯನ ಅಂತರಂಗದ ಅವನತಿಯ ಕಥನವಿದು. ಇತ್ತೀಚೆಗೆ ಉಡುಪಿಯ ‘ರಥಬೀದಿ ಗೆಳೆಯರು’ ತಂಡ ಈ ನಾಟಕವನ್ನು ರವೀಂದ್ರ ಕಲಾಕ್ಷೇತ್ರದಲ್ಲಿ ಪ್ರದರ್ಶಿಸಿತು.
ಮಾಂಟೋ ಕತೆಗಳಿಗೆ ಬೆಚ್ಚಿ ಬೀಳಿಸುವ ಗುಣವಿದೆ. ಆದರೆ ಬೆಚ್ಚಿಸುವುದೇ ಆತನ ಉದ್ದೇಶವಲ್ಲ. ಇದೇನು ಹೀಗಾಯಿತಲ್ಲ, ಮನುಷ್ಯ ಮನುಷ್ಯರನ್ನು ಒಂದಾಗಿಸಬೇಕಾದ ಧರ್ಮ, ಪ್ರಾದೇಶಿಕ ಭಿನ್ನತೆಗಳು ಮನುಷ್ಯರನ್ನು ಒಡೆದು ಜೀವನವನ್ನೇ ಛಿದ್ರಗೊಳಿಸಿವೆಯಲ್ಲ ಎಂಬ ವಿಷಾದವೇ ಆತನ ಕತೆಗಳಲ್ಲಿ ಸ್ಥಾಯಿಯಾಗಿ ಕಾಣುವಂಥದು. ಬೆಚ್ಚಿಸುವ ತಾತ್ಕಾಲಿಕ ಗುಣ ಹಾಗೂ ಅಂತರಂಗವನ್ನು ತೀವ್ರವಾಗಿ ಮಿಡಿಯುವ ಈ ವಿಷಾದ- ಎರಡೂ ಸೇರಿ ಮಾಂಟೋ ಕತೆಗಳಿಗೊಂದು ಅಪೂರ್ವವಾದ ನಾಟಕೀಯತೆ ಪ್ರಾಪ್ತವಾಗಿದೆ. ಹೀಗಾಗಿ ಈತನ ಕತೆಗಳ ರಂಗರೂಪಕ್ಕೆ ನಾಟಕೀಯತೆಯನ್ನು ಹೊರಗಿನಿಂದ ತರಬೇಕಾಗಿಲ್ಲ. ಇದು ನಿರ್ದೇಶಕರಿಗಿರುವ ಸೌಲಭ್ಯ.
ಆದರೆ ಸವಾಲು ಕೂಡ ಇದೇ ಆಗಿದೆ. ಮಾಂಟೋನ ಕೆಲ ಪುಟ್ಟ ಕತೆಗಳಲ್ಲಿರುವ ದಾರುಣ ವಾಸ್ತವ, ರಂಗದ ಮೇಲೆ ತೋರಿಸುವುದಕ್ಕೆ ಕೂಡ ಅಂಜಿಕೆಯಾಗುವಂಥದು. ಆದರೆ ಇದರ ಪರಿಣಾಮವನ್ನು ಮಸುಕುಗೊಳಿಸಿ ತೋರುವುದು ಕೂಡ ಮಾಂಟೋನ ದರ್ಶನಕ್ಕೆ ಅಪಚಾರ ಬಗೆದಂತೆ. ಹೀಗಾಗಿ ಇಲ್ಲಿ ನಿರ್ದೇಶಕರಿಗೆ ಕತ್ತಿಯ ಮೇಲಿನ ನಡಿಗೆ. ನಿರ್ದೇಶಕ ಡಾ.ಶ್ರೀಪಾದ ಭಟ್ ಶಿರಸಿ ಇದನ್ನು ಸಮರ್ಥವಾಗಿಯೇ ನಿಭಾಯಿಸಿದ್ದಾರೆ. ರಥಬೀದಿ ಗೆಳೆಯರು ಕೂಡ ಸಹಜವಾಗಿ ಅಭಿನಯಿಸಿದ್ದಾರೆ.
ಮಿಸ್ಟೇಕ್ ನಾಟಕ ನಾಲ್ಕು ಕತೆಗಳನ್ನು ಜೋಡಿಸಿ ರೂಪಿಸಿದ್ದು. ನಾಟಕಕ್ಕೆ ಹೆಸರು ನೀಡಿದ ಕತೆ ತುಂಬಾ ಪುಟ್ಟದು. ನಾಲ್ಕೈದು ನಿಮಿಷದಲ್ಲಿ ಮುಗಿಯುವಂಥದು. ಕತೆಯನ್ನು ಓದಿಕೊಂಡಿರದೆ ಇದ್ದವರಿಗೆ ಈ ‘ಮಿಸ್ಟೇಕ್’ ಏನೆಂದು ಅರ್ಥವಾಗದು. ಮಿಸ್ಟೇಕ್ ಏನೆಂಬುದನ್ನು ಕತೆಗಾರ ಕೂಡ ವಾಚ್ಯಗೊಳಿಸುವುದಿಲ್ಲ. ಆದರೆ ಕತೆಯ ಪಠ್ಯಕ್ಕೆ ಸಂಪೂರ್ಣ ನಿಷ್ಠವಾಗಿರುವ ಶಿಸ್ತನ್ನು ಇಲ್ಲಿ ತುಸು ಸಡಿಲಿಸಬಹುದಿತ್ತೇನೊ.
‘ಓಪನ್ ಮಾಡು’, ‘ಶರೀಫನ್’ ಹಾಗೂ ‘ಪುರುಷಾರ್ಥ’ ಕತೆಗಳನ್ನಂತೂ ಸುಂದರವಾಗಿ ನಿರೂಪಿಸಲಾಗಿದೆ. ‘ಪುರುಷಾರ್ಥ’ದ ಮುಮ್ತಾಜ್ನ ಪಾತ್ರವಂತೂ ಇಡೀ ನಾಟಕಕ್ಕೆ ಜೀವ ತುಂಬುತ್ತದೆ. ಉಳಿದವರೂ ಅದಕ್ಕೆ ಪೋಷಕ ರೀತಿಯಲ್ಲಿ ದುಡಿದಿದ್ದಾರೆ. ಕಬೀರ, ದಾಸರ ಪದಗಳನ್ನು ಹಿತಮಿತವಾಗಿ ಹಿನ್ನೆಲೆಯಲ್ಲಿ ಅಳವಡಿಸಿಕೊಂಡದ್ದು ನಾಟಕಕ್ಕೆ ಇನ್ನಷ್ಟು ಶ್ರವ್ಯಸುಖ ಕೊಟ್ಟಿದೆ.
ಇಷ್ಟು ಹೇಳಿದರೆ ನಾಟಕದ ಪರಾಮರ್ಶೆಯೇನೋ ಮುಗಿಯುತ್ತದೆ. ಆದರೆ ಇದನ್ನು ನಾವು ನೋಡುತ್ತಿರುವ ಸಂದರ್ಭದ ಬಗ್ಗೆ ಒಂದು ಅಬ್ಸರ್ವೇಶನ್ ಹೇಳದೆ ಹೋದರೆ ತಪ್ಪಾಗುತ್ತದೆ. ಇತ್ತೀಚೆಗಂತೂ ಕರ್ನಾಟಕ, ಪ್ರಧಾನವಾಗಿ ಉಡುಪಿ- ದಕ್ಷಿಣ ಕನ್ನಡ ಜಿಲ್ಲೆಗಳು ಮತೀಯ ಮೂಲಭೂತವಾದ ಹಾಗೂ ಹಿಂಸೆಯ ಆಡುಂಬೊಲಗಳಾಗಿ ಹತಾಶೆಯ ಅಂಚಿಗೆ ತಲುಪಿರುವುದನ್ನು ನಾವು ಗಮನಿಸಿದ್ದೇವಷ್ಟೆ. ಇದನ್ನು ವಿರೋಸುವ ದನಿಗಳೂ ಅಲ್ಲಿಂದಲೇ ಹುಟ್ಟಿಕೊಂಡಿವೆ. ಈ ನಿಟ್ಟಿನಲ್ಲಿ ನೋಡಿದರೆ, ಮಿಸ್ಟೇಕ್ ನಾಟಕವನ್ನು ಉಡುಪಿಯ ತಂಡದವರೇ ಆಯ್ದುಕೊಂಡು ಅಭಿನಯಿಸಿರುವುದು ತುಂಬಾ ಅರ್ಥಪೂರ್ಣ. ಇದು ಈ ನಾಟಕ ಪ್ರದರ್ಶನಕ್ಕೆ ನೀಡಬಹುದಾದ ಭರತವಾಕ್ಯ.






ಮತ್ತೊಂದು ‘ಅನರ್ಥಪೂರ್ಣ’ ವಿಮರ್ಶೆ. ಕೊನೆಯ ಪ್ಯಾರಾದ ಅಗತ್ಯವೇ ಇರಲಿಲ್ಲ. ಮಿಸ್ಟೇಕ್ ನಾಟಕದ ವಿಮರ್ಶೆಯ ನಡುವೆ ಉಡುಪಿ ಜಿಲ್ಲೆಯ ಮತೀಯ ಹಿಂಸೆಯನ್ನು ಯಾಕೆ ಎಳೆದು ತರಬೇಕು ? (edited)
– ಕರುಣಾಕರ ಉಡುಪಿ
maanto kathegalige rangaroopa needuvudu
kashtada kelasa. kruura vaastava kalaatmakavaagi aste manakalakuvante
moodiruttade. ondu pathyavannu ranga
roopakke taruvalli nirdeeshakaru siddha
hastaru.maanto nannu rangakke tanda
S,Bhat rige dhanyavaadagalu.
Himse ellelluu vijrumbisuttiruvaga, adannu virodhisuva ella putta putta dhvanigalannu gurutisuvudu, aa dhavnigala paravaagi naavoo danigoodisuvdu “anartha” ve? tannage kulitu dayavittu yochisi-
ಯಾವುದೇ ಕಲೆಯ ಅಭಿವ್ಯಕ್ತಿಯ ಬಗ್ಗೆ, ಅದು ಹುಟ್ಟಿಕೊಳ್ಳುವ (ಕೆಲವೊಮ್ಮೆ ರೂಪಾಂತರಗೊಂಡು ಮರುಹುಟ್ಟು ಪಡೆದುಕೊಳ್ಳುವ) ಸಂದರ್ಭದ ಸಾಮಾಜಿಕ-ರಾಜಕೀಯ -ಸಾಂಸ್ಕ್ರತಿಕ ಹಿನ್ನೆಲೆಯಲ್ಲಿ ವಿವೇಚಿಸುವುದು ಸಮಯ ಧರ್ಮ. ಅದು ವಿಮರ್ಶೆಯ ಧರ್ಮ. ಈ ಹಿನ್ನೆಲೆಯಲ್ಲಿ “ನಿಜದ ಸೂಜಿಮೊನೆ” ಕಣ್ಣು ಚುಚ್ಚಬಾರದೆಂದು ನಿರೀಕ್ಷಿಸುವುದು ತಪ್ಪು.
ಮನಸ್ಸನ್ನು ಆರ್ದ್ರಗೊಳಿಸುವ ಮಾಂಟೋನ ಬರಹದೊಳಗಿನ ಶಕ್ತಿ, ಈ ಸಾಂಸ್ಕ್ರತಿಕ ವಿಘಟನೆಯ ಕಾಲಗರ್ಭದಲ್ಲಿ ಮತ್ತೆ ಯಾವ ರೂಪ ತಾಳಿ ಹೊಮ್ಮಿದರೂ ಅದನ್ನು ಸ್ವಾಗತಿಸಬೇಕು.
ಹರೀಶ್, ಈ ನೆಲದ ನಿಜವನ್ನು ಅನುಭವಿಸಿ ಅರಿತವರು ನಾವು. ಮುಚ್ಚಿಟ್ಟಷ್ಟೂ ಮನಸ್ಸಿಗೆ ಹಿಂಸೆಯೇ! ಬಿಡುಗಡೆ ಬೇಕು. ಬಿಡುಗಡೆಯ ಧ್ವನಿ ಪ್ರತಿಭಟನೆಯ ವರಸೆ ಹೊತ್ತಿದ್ದರೆ ವಿಚ್ಛಿದ್ರಕಾರಿ ಶಕ್ತಿಗಳಿಗೆ ಸಹಿಸುವುದು ಕಷ್ಟವೇ! ಅದು ನಮ್ಮ ತಪ್ಪಲ್ಲ.ನೀವು ಬರೆಯುತ್ತಿರಿ. ಅಭಿನಂದನೆಗಳು..