ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಯಶೋಧೆ…

ಸುಜಾತ‌ ಲಕ್ಷ್ಮೀಪುರ

ಹೆಗಲ ಮೇಲೆ ಹೊತ್ತು
ಸುತ್ತಿಸಿ ಸಂತೆ ಜಾತ್ರೆ
ತನ್ನ ತಟ್ಟೆಯಿಂದೆತ್ತಿ ತುತ್ತು ಬಾಯಿಗೆ ಇಟ್ಟು
ಅವ್ವನೆದೆಯೊಳಗದೆಷ್ಟು ಚಿತ್ತ ಚಿತ್ತಾರದ ಬೀಜ ನೆಟ್ಟು
ಫಸಲು ತೆಗೆದು
ಕಣಜ ಸೇರಿಸುವ ಮೊದಲು
ಮಲಗಿದ ಅಪ್ಪ ನೆಲ ಬಿಟ್ಟೇಳಲಿಲ್ಲ.
ಧುತ್ತನೆರಗುವ ಸಾವು
ಬದುಕಿದವರೊಳಗದೆಂಥ ಬೆಳಕು ನೀಡಲು‌ ಸಾಧ್ಯ?

ಹರಿದ ಚಾಪೆಯ ಮೇಲೆ ಹೊದ್ದ ರಗ್ಗಿನ
ರಂಧ್ರದೊಳಗಿಂದ ತೂರಿಕೊಂಡು ಮೈಸವರಲು
ಜಿದ್ದಿಗೆ ಬಿದ್ದ ನಕ್ಷತ್ರಗಳ ಸೋಲಿಸಿ
ಉಸಿರಾಡರೂ ಎಡೆಯಿಲ್ಲದಂತೆ ಆವರಿಸಿ
ಕತ್ತಲೆಯೂ ನಾಚುವಂತೆ ಮುದ್ದಿಸುತ್ತಿದ್ದ ಸಖ
ದಿನಗಳೆದಂತೆ ತನ್ನದೇ ಹಳವಂಡಗಳಲಿ ಕಳೆದೇಹೋದನು
ಸುಖ ಸಂಪತ್ತಿನ ನಶ್ವರತೆಯ ಬೋಧಿಸಿ.

ಎದೆಗಪ್ಪಿ, ಸೊಂಟಕ್ಕೆ ಸುತ್ತಿ
ಬಾಯೊಳಗಿಂದ ತುತ್ತು ಕಸಿದು ತಿಂದು
ತೊಡೆಯ ಮೇಲಾಡಿ
ನಲಿದಾಡಿ ಹೊಕ್ಕುಳೊಳಗೆ ಕಚಗುಳಿ ಬರೆದು
ಮೊಲೆ ತುಂಬಿ
ಜಿನುಗಿ ಗುಟುಕು ಹೀರಿ
ಅಂಗಳದಲ್ಲಿ ಮಲ್ಲಿಗೆ ತೂಕದ ಹೆಜ್ಜೆ ಚಿತ್ರವ ಬರೆದು
ಅಂಗೈಯ ಗಿಣಿಗಳಾಗಿದ್ದವರು
ಎದೆಯೆತ್ತರ ಬೆಳೆದು
ಜೊತೆ ಹಕ್ಕಿಗಳ ಹುಡುಕಿ
ಕನಸ ಕಡಲಿನಲಿ‌ ಮುಳುಗಿ ಹೋದರು.

ನಾನೂ ಯಶೋಧರೆ
ಎಷ್ಟು ಬುದ್ಧರು ನನ್ನ ಬದುಕಿನೊಳಗೆ!
ಕಳೆದು ಹೋದ ಬೆಳದಿಂಗಳೆಷ್ಟು ನನ್ನ ಬಾಳಿನಲ್ಲಿ!!

‍ಲೇಖಕರು Admin

24 May, 2022

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading