ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಕವಿತೆ- ಲೋಕಾಂತ…

ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು

ಕೆಳ ಅಂತಸ್ತಿನ ಮನೆಯಲ್ಲಿ
ಜೋರಾಗಿ ಅಳುವ ಮಗುವಿನ ಸದ್ದು,
ಸುಮ್ಮನೆ ಕುಳಿತಿದ್ದ ನನ್ನ ಕಿವಿಗೂ ಬಿದ್ದು
ಒಂದರೆ ಕ್ಷಣ ವಿಚಲಿತವಾಯ್ತು ಮನಸ್ಸು.
ಅಪ್ಪಳಿಸಿ ಬಂದ ಗಂಡು ಸದ್ದು,
ಧಢಾರನೇ ಬಾಗಿಲು ಹಾಕಿದ ಸದ್ದು.
ಆಳದ ಗುಹೆಯಿಂದ ಹೊರಬಿದ್ದ ಹಾಗೆ
ಮತ್ತೆ ಕ್ಷೀಣವಾದರೂ ಅಳುವಿನ ಸದ್ದು,
ಕಣ್ಣು ಮಾತ್ರ ನೋಟ ಹೊರಡಿತು.

ಪಕ್ಕದ ಖಾಲಿ ಸೈಟ್ ನಲ್ಲಿ ಅರ್ಧ ಕಟ್ಟಿದ ಗೋಡೆಯ ಮೇಲೆ ಕಲ್ಲಿಟ್ಟು,
ನೂಲು ಹಿಡಿಯುತ್ತಿರುವ ವ್ಯಕ್ತಿಯ ಕಿವಿಗೂ ಬಿದ್ದಿರಬಹುದಾ ಈ ಕೂಗು?
ತರಕಾರಿ ಗಾಡಿ ಮನೆಯೆದುರು ಬಂದು ಆಗಲೇ ಬಹಳ ಹೊತ್ತಾಯಿತು.
ಸೊಪ್ಪು ,ತರ್ಕಾರಿ
ಬೀಟ್ರೋಟ್ ಟೊಮ್ಯಾಟೊ…
ಯಾವುದೇ ಏರಿಳಿತವಿಲ್ಲದ ಸಹಜ ಕೂಗು.
ರಸ್ತೆಯ ತುಂಬಾ ನಡೆಯುತ್ತಿರುವುದು ನಿತ್ಯ ವ್ಯಾಪಾರ.

ತಟ್ಟಿದಂತೆ ಕಾಣಲಿಲ್ಲ ಯಾರಿಗೂ
ತನ್ನ ಹೊರತಾದ ಬೇರೆ ಸದ್ದು!
ತನ್ನದೇ ಗುಂಗಲ್ಲಿ ಸಾಗುವ ಲೋಕ
ಕ್ರೌರ್ಯಕ್ಕೂ ಹೊರಗಾಯಿತೇ?
ಅರಳುವ ಹೂವಿಗೂ
ಕಣ್ಣಿಲ್ಲ
ನರಳುವ ಅಳುವಿಗೂ
ಕಿವಿಯಿಲ್ಲ.

ನನ್ನ ಕಿವಿಯಲ್ಲಿ ಹೆಚ್ಚಾಯಿತೇ
ಮತ್ತೆ ಮತ್ತೆ ಮಗುವಿನ ಕೂಗು?

ಎಲ್ಲಿಲ್ಲದ ಸಿಟ್ಟಿನಿಂದ ಧಡಬಡನೇ
ಕೆಳಗಿಳಿದು ಬಾಗಿಲು ಬಡಿದೆ,
ಲೋಕದ ಭಾರವೆಲ್ಲಾ
ಈಗ ಹೆಗಲ ಮೇಲೆ!
ತೆರೆದ ಬಾಗಿಲ ಮಂದೆ ಪ್ರಶ್ನಾರ್ಥಕವಾಗಿ ನೋಡುತ್ತಿರುವ ಅದೇ ಗಂಡುದನಿಯ ಆಸಾಮಿ,
ಇನ್ನೂ ಉಮ್ಮಳಿಸಿ ಅಳುತ್ತಿರುವ ಮಗು;
ಮತ್ತು
ಕೆನ್ನೆ ಮೇಲೆ ಮೂಡಿದ್ದ ನಾಲ್ಕು ಬೆರಳು!

“ಇಲ್ವೇನ್ರಿ ನಿಮಗೆ ಕರುಳು?
ಹೊಡಿತೀರಲ್ರೀ ಹೀಗೆ ಮಗೂನ?
ನಾಚಿಕೆ ಆಗಲ್ವಾ?”

ದಬಾಯಿಸಿದರೂ,
ಮಾತಿರದೆ ಸುಮ್ಮನೇ ನೋಡುತ್ತಾ ನಿಂತ ಗಂಡಸು
ಮತ್ತು ಅವನ ಮೌನ;
ಪ್ರತಿಭಟಿಸುವುದನ್ನೇ ಮರೆತ ಲೋಕದ
ಪ್ರತಿರೂಪದಂತಿತ್ತು!

ಸಿಟ್ಟು ನೆತ್ತಿಗೇರಿ ಅಂತಃಕರಣ ಬಹುವಾಗಿ ಉಕ್ಕಿ,
ಮಗುವನ್ನು ಎತ್ತಿಕೊಳ್ಳಲು ಚಾಚಿದರೆ ಕೈ ;
ಓಡಿ ಹೋಗಿ ತನ್ನ ಅಪ್ಪನನ್ನೇ ಬಾಚಿ ತಬ್ಬಿಕೊಂಡಿತು ಮಗುವಿನ ಎರಡೂ ಕೈ!

‍ಲೇಖಕರು Admin

10 February, 2022

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading