ಶಶಿಕಾಂತ ಯಡಹಳ್ಳಿ
ಚಿಕ್ಕವನಾಗಿದ್ದಾಗ ನನಗೆ
ಗುರಿ ಇತ್ತು ದಾರಿ ಗೊತ್ತಿರಲಿಲ್ಲ.
ಈಗ ದೊಡ್ಡವನಾಗಿದ್ದೇನೆ
ದಾರಿ ಸಿಕ್ಕಿದೆ ಗುರಿ ಮರೆತಿದೆ.
* * *
ಪರಿಚಿತ ಸ್ನೇಹಿತರ
ಅಪರಿಚಿತ ಮುಖಗಳು
ಒಟ್ಟಿಗೆ ಕಾಣುವುದಿಲ್ಲ.
ಕಾಲನ ಓಟದಲ್ಲಿ ಮುಖವಾಡ
ಕಳಚಿ ಬಿದ್ದಂತೆಲ್ಲಾ
ಸಂಬಂಧಗಳು ಉಳಿಯುವುದಿಲ್ಲ.
* * *
ಇತ್ತೀಚೆಗೆ ಮೆಟ್ರೋ ಸಿಟಿಯಲ್ಲಿ
ಸಂಬಂಧಗಳ ಸಾಚಾತನದ ಬಗ್ಗೆ ಗುಮಾನಿಯಿದೆ.
ಹಣದ ಹಿಂದೆ ಬಿದ್ದ ಸ್ವಾರ್ಥಿಗಳ
ನೀಚತನ ನಿರಂತರವಾಗಿ ಸಾಗಿದೆ.
* * *
ಪ್ರೀತಿಯ ಬಲೆಯಲಿ ಸಿಕ್ಕ ಮೇಲೆ
ಅದರ ನೆಲೆಯನರಸಿ ಹೋಗದಿರು….
ಶೋಧಿಸುವ ಕಯಾಲಿಗೆ ಬಿದ್ದವರು
ಪ್ರೀತಿಯನ್ನೇ ಕಳೆದುಕೊಂಡರು….
* * *
ಯಾಕೀ ನಿರಾಶೆ, ಯಾತಕೀ ಹತಾಶೆ
ನನ್ನ ನಿರೀಕ್ಷೆ ಅತಿಯಾಯಿತೇನೋ?
ಯಾಕೆ ಈ ವ್ಯವಸ್ಥೆ ಇಷ್ಟೊಂದು ದುರಾವಸ್ಥೆ
ದುರಸ್ತಿ ಮಾಡಲು ಸಾಧ್ಯವೇ ಇಲ್ಲವೇನೋ?
* * *
ಬದುಕು ಬಲು ರೋಚಕ ಎಂದುಕೊಂಡು
ಸೂಚನೆಗಳನ್ನು ಮೀರಿ ಮೆರೆದವನ
ಮನೆಯಲ್ಲೀಗ ಸೂತಕ…..
* * *
ಪರಿಚಿತ ಲೋಕದ ಅಪರಿಚಿತ ಮಜಲುಗಳು ಕಾಣುವುದಿಲ್ಲ ಕಣ್ಣಿಗೆ
ಒಟ್ಟಿಗಿದ್ದೂ ನೆಟ್ಟಗಿದ್ದರೂ ಮುಚ್ಚುಮರೆ ನಿಗೂಢಗಳು ಚುಚ್ಚುತ್ತವೆ ತಣ್ಣಗೆ.
* * *
ಬದುಕಿನ ದ್ವಂದ್ವ-ವೈರುಧ್ಯ ಅಸಾಂಗತ್ಯಗಳನ್ನು
ಯಾವ ತತ್ವ-ಸಿದ್ದಾಂತಗಳೂ ಪರಿಪೂರ್ಣವಾಗಿ ವಿವರಿಸಲಾರವು…
ನಾವು ಮನುಷ್ಯರು ಇರೋದೇ ಹೀಗೆ
ಯಾವ ಧರ್ಮ-ಕರ್ಮಗಳೂ ಅಪೂರ್ಣತೆಯನ್ನು ಪರಿಹರಿಸಲಾರವು…
* * *
ಆಗ ತ್ರಿಕರಣ ಶುದ್ದೀಕರಣ
ಮುಂದೆ ಗುರಿಯಿತ್ತು
ಹಿಂದೆ ಗುರುವಿದ್ದ.
ಈಗ ಜಾಗತೀಕರಣ
ಗುರಿಯೂ ಇಲ್ಲಾ, ಗುರುವೂ ಇಲ್ಲಾ
ಯಾಕೆಂದರೆ ಗುರುವಿಗೆ ಗುರಿ ಗೊತ್ತಿಲ್ಲ.
* * *
ಗಂಡು ಹೆಣ್ಣಿನ ನಡುವಿನ ಮಜಲುಗಳು
ಯಾವ ಕಾಲವಾದರೂ ಗೋಜಲುಗಳೇ…
ಪ್ರೀತಿ ಪ್ರೇಮದ ಪರಾಕಾಷ್ಟೆಯಲ್ಲಿ ಎಲ್ಲಾ ಗೋಜಲುಗಳೂ
ಗಮ್ಯ ತಲುಪುವ ಮಜಲುಗಳೇ…..
* * *
ಗಂಡು ಹೆಣ್ಣುಗಳು ಅರ್ಥೈಸಿಕೊಳ್ಳುವ
ವ್ಯರ್ಥ ಪ್ರಯತ್ನ ನಿರಂತರ..
ಮೊದಲು ಒಬ್ಬರಿಗೊಬ್ಬರು
ಮಾನಸಿಕವಾಗಿ ಆಗಲೇಬೇಕು ರೂಪಾಂತರ…..
* * *
ಇನ್ನೂ ಎಷ್ಟೂಂತ ಹುಡುಕಲಿ, ಎಲ್ಲೀಂತ ಹುಡುಕಲಿ
ಕಳೆದುಕೊಂಡ ನೆಮ್ಮದಿಯನ್ನ….
ಪ್ರೀತಿ ಆಯ್ತು..ಮದುವೆ ಆಯ್ತು.. ಮಕ್ಕಳೂ ಆಯ್ತು
ನೆಮ್ಮದಿಯ ನೆಲೆ ಎಂದುಕೊಂಡಿದ್ದೆಲ್ಲಾ ಕೊಟ್ಟಿದ್ದು ಬರೀ ನಿರಾಶೆಯನ್ನ……
* * *
ಯಾವುದೇ ಕೋಮುದಳ್ಳುರಿ ಬರೀ-
ಸಂತ್ರಸ್ತರನ್ನು ಮಾತ್ರ ಸುಡುವುದಿಲ್ಲ…
ಮನುಷ್ಯತ್ವ ಇರುವವರ ಎದೆಗೆ
ಕೊಳ್ಳಿ ಇಡದೇ ಬಿಡುವುದಿಲ್ಲ.
* * *
ಈ ಜಾತಿವಾದ ಯಾರನ್ನೂ ಬಿಟ್ಟಿಲ್ಲ
ಸತ್ತವರನ್ನೂ ಸಹ..
ಹುಟ್ಟದವರನ್ನು ಇನ್ನೂ ತಟ್ಟಿಲ್ಲ
ಯಾಕೆಂದರೆ ಅವರಿನ್ನೂ ಹುಟ್ಟಿಲ್ಲ…..
* * *
ಸಂಕಟ ಸಂಕೋಲೆಗಳೊಳಗೂ
ಕ್ಷೀಣವಾಗದು ಬದುಕುವ ಆಸೆ..
ಕಾರಣ……
ನೆಮ್ಮದಿಯ ನಾಳೆಯತ್ತ ಇರುವ
ಅದಮ್ಯ ಭರವಸೆ…
* * *
ರಾಗ ತಾಳಬದ್ದವಾಗಿ
ಹಾಡುತ್ತಾರೆ ಗಾಯಕರು
ಅವರದು ಕೊರಳಿನ ದ್ವನಿ….
ಗಾರ್ದಭ ರಾಗದಲ್ಲಿ
ಕರ್ಕಶವಾಗಿ ಹಾಡುತ್ತಾರೆ ಭಿಕ್ಷುಕರು
ಅವರದು ಕರುಳಿನ ದ್ವನಿ….
* * *
ದೇಶದ ಆರ್ಥಿಕತೆ ಛಿದ್ರಗೊಂಡಿದೆ
ಸಾಮಾಜಿಕ ಭದ್ರತೆ ಭಗ್ನಗೊಂಡಿದೆ
ಆದರೂ ಆಳುವವರ ಹೇಳುತ್ತಾರೆ
ಭಾರತ ಬೆಳಗುತ್ತಿದೆ.









vaastaavika sthiti tereditta kavanagaLu..nice..very nice..
vAstavakke hattiravada kavite
ಹುಟ್ಟದವರನ್ನು ಇನ್ನೂ ತಟ್ಟಿಲ್ಲ
ಯಾಕೆಂದರೆ ಅವರಿನ್ನೂ ಹುಟ್ಟಿಲ್ಲ…..
What kind of poetry is this 🙁
very realistic and poignant sir. nice.